ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು
ನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.
ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ ಆರಂಭಿಸಿದ್ದರು. ಕಾರ್ಯಕರ್ತರು ಏರ್ಪಡಿಸಿದ್ದ ಪ್ರಚಾರ ಸಭೆ ಪಾಲ್ಗೊಂಡು ಅಲ್ಪಸಂಖ್ಯಾತರನ್ನು ವಿರೋಧಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ವರುಣ್ ಗಾಂಧಿ ಭಾಷಣಕ್ಕೆ ಪ್ರತಿಪಕ್ಷಗಳು ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳಿಂದ ತೀವ್ರ ಪ್ರತಿರೋಧ ಬಂದಿತ್ತು.
ಕೇಂದ್ರ ಚುನಾವಣೆ ಆಯೋಗ ವರುಣ್ ಗಾಂಧಿ ಮಾಡಿದ ಭಾಷಣದ ಸಿಡಿಯನ್ನು ತರಿಸಿಕೊಂಡು ಕೂಲಂಕಷವಾಗಿ ಪರಿಶೀಲನೆ ನಡೆಸಿದೆ. ಭಾಷಣದಲ್ಲಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ದ ಉದ್ರೇಕಕಾರಿ ಭಾಷಣ ಮಾಡಿರುವುದು ಸಾಬೀತಾಗಿದೆ. ಆದ್ದರಿಂದ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮುಂದಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವರುಣ್ ಗಾಂಧಿ, ಈ ಪ್ರಕರಣದಲ್ಲಿ ರಾಜಕೀಯ ಕುತಂತ್ರ ಅಡಗಿದೆ. ಅಲ್ಪಸಂಖ್ಯಾತರ ವಿರೋಧಿಸಿ ಪ್ರಚೋದನಕಾರಿ ಭಾಷಣ ಮಾಡಿಲ್ಲ. ಸಿಡಿಯಲ್ಲಿರುವ ಚಿತ್ರೀಕರಣದ ದೃಶ್ಯಾವಳಿಗಳನ್ನು ತಿರುಚಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ವರುಣ್ ಹೇಳಿಕೆಗೆ ಆಯೋಗ ಕೆಂಗಣ್ಣು, ನೋಟಿಸ್











Click it and Unblock the Notifications