ರಾಜ್ಯದ ಮೂರು ಕಡೆ ಪ್ರಜಾರಾಜ್ಯಂ ಸ್ಪರ್ಧೆ
ಬೆಂಗಳೂರು, ಮಾ. 19 : ಕರ್ನಾಟಕದಲ್ಲಿ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ಪ್ರಜಾರಾಜ್ಯಂ ಪಕ್ಷದ ಸಂಸ್ಥಾಪಕ ಹಾಗೂ ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲಿ ಪ್ರಜಾರಾಜ್ಯಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.
ಬಳ್ಳಾರಿ, ಕೋಲಾರ, ರಾಯಚೂರು, ತುಮಕೂರು, ಚಿತ್ರದುರ್ಗ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ತೆಲುಗು ಭಾಷಿಗರು ಹೆಚ್ಚಾಗಿದ್ದರೂ, ಈ ಬಾರಿಯ ಚುನಾವಣೆಯಲ್ಲಿ ಕೋಲಾರ, ರಾಯಚೂರು ಮತ್ತು ಚಿತ್ರದುರ್ಗ ಕ್ಷೇತ್ರಗಳಿಂದ ಮಾತ್ರ ತನ್ನ ಪಕ್ಷದ ಅಬ್ಯರ್ಥಿಗಳನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.
ಮಾರ್ಚ್ 21ರಂದು ಹೈದರಾಬಾದ್ ನಲ್ಲಿ ನಡೆಯುವ ಪಕ್ಷದ ಚುನಾವಣಾ ಸಭೆಯಲ್ಲಿ ಈ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಪ್ರಜಾರಾಜ್ಯಂ ಪಕ್ಷದ ಮೂಲಗಳು ತಿಳಿಸಿವೆ. ಚಿರಂಜೀವಿ ಅಭಿಮಾನಿಗಳ ಸಂಘದ ಅಧ್ಯಕ್ಷ ಸ್ವಾಮಿ ನಾಯ್ಡು ಈ ಮೂರೂ ಕ್ಷೇತ್ರಗಳಲ್ಲಿ ಸರ್ವೆ ನಡೆಸಿದ್ದು, ಉತ್ತಮ ಪ್ರತಿಕ್ರಿಯೆ ಬಂದಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)