ಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ

ನಗರದ ಬಾಪೂಜಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಾರತ್ ನಿರ್ಮಾಣ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸೋನಿಯಾಗಾಂಧಿ, ದೇಶದ ಅಭಿವೃದ್ದಿಗೆ ಕಾಂಗ್ರೆಸ್ ಪಕ್ಷವೇ ಸೂಕ್ತ. ದೇಶದಲ್ಲಿ ನಡೆಯುತ್ತಿರುವ ಮಹತ್ವದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಮತ ನೀಡಿ ಎಂದು ಅವರು ಮನವಿ ಮಾಡಿಕೊಂಡರು.
ದೇಶದ ಅಭಿವೃದ್ಧಿ ಪತದತ್ತ ಕೊಂಡೊಯ್ಯುತ್ತಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಬೇಕೆ, ದೇಶದ ಸಮಗ್ರತೆ, ಶಾಂತಿ ಹಾಳು ಮಾಡಿ ಜನಾಂಗೀಯ ಸಂಘರ್ಷ ಉಂಟು ಮಾಡುತ್ತಿರುವ ಪಕ್ಷ ಬೇಕೆ ಎನ್ನುವುದನ್ನು ನೀವೇ ನಿರ್ಧರಿಸಬೇಕು ಎಂದು ಸೋನಿಯಾ ಗಾಂಧಿ ಸಾರ್ವಜನಿಕರಿಗೆ ಕೇಳಿದರು. ನಂತರ ಅವರ ಮಾತು ರಾಜ್ಯ ಸರ್ಕಾರದ ಕಡೆ ತಿರುಗಿದ್ದು, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಕರ್ನಾಟಕ ಪ್ರಜ್ಞಾವಂತರ ರಾಜ್ಯ, ಆದರೆ, ಇಂದು ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿನ ಪರಿಸ್ಥಿತಿ ಏನಾಗಿದೆ. ಅಲ್ಪಸಂಖ್ಯಾತರು ಭಯದಿಂದ ಜೀವನ ಸಾಗಿಸುವ ಸಂದಿಗ್ದ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನಿರ್ಭಯದ ಜೀವನ ನಡೆಸಿಲು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಎಂದು ನೆರೆದಿದ್ದ ಜನಸ್ತೋಮಕ್ಕೆ ಮನವಿ ಮಾಡಿಕೊಂಡರು.
ರಾಜ್ಯದ ಮಧ್ಯ ಭಾಗದಲ್ಲಿರುವ ದಾವಣಗೆರೆ ಕಾಂಗ್ರೆಸ್ ಪಕ್ಷದ ಅದೃಷ್ಟದ ಕರ್ಮಭೂಮಿ. 1999 ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಇಲ್ಲಿಂದ ಚುನಾವಣೆ ಪ್ರಚಾರ ಕಾರ್ಯ ಆರಂಭಿಸಲಾಗಿತ್ತು. ಆಗ ಕಾಂಗ್ರೆಸ್ ಪಕ್ಷ ಪ್ರಚಂಡ ಬಹುಮತದಿಂದ ಆರಿಸಿಬಂದಿತ್ತು. ಲೋಕಸಭೆ ಚುನಾವಣೆಗೆ ಕೂಡಾ ಇಲ್ಲಿಂದಲೇ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications