ಎಸ್ ಎಂ ಕೃಷ್ಣ ಸ್ಪರ್ಧೆಯಿಂದ ಹಿಂದಕ್ಕೆ
ಬೆಂಗಳೂರು, ಮಾ. 25 : ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಲೋಕಸಭಾ ಚುನಾವಣ ಸ್ಪರ್ಧೆಯಿಂದ ಹಿಂದಕ್ಕೆ ಸರಿದಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಇವರ ಹೆಸರು ಹೆಚ್ಚುಕಮ್ಮಿ ಅಂತಿಮಗೊಂಡಿತ್ತು. ಹೈಕಮಾಂಡ್ ಗೆ ಪತ್ರ ಬರೆದಿರುವ ಕೃಷ್ಣ ತಮ್ಮ ನಿಲುವನ್ನು ಸ್ಪಷ್ಟ ಪಡಿಸಿದ್ದಾರೆ.
ಕಾಂಗ್ರೆಸ್ ಪರ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ ಎಂದು ಹೇಳಿರುವ ಕೃಷ್ಣ, ರಾಜ್ಯಸಭಾ ಸದಸ್ಯರಾಗಿ ಮುಂದುವರಿಯಲು ಆಸಕ್ತಿ ತೋರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿಗೆ ನನ್ನ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಕೃಷ್ಣ ಹೇಳಿದ್ದಾರೆ.
ಚುನಾವಣೆಗೆ ಸ್ಪರ್ಧಿಸುವ ವಿಚಾರದಲ್ಲಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡುತ್ತಿದ್ದ ಕೃಷ್ಣ, ಮೊನ್ನೆಯಷ್ಟೇ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ಹೇಳಿಕೆ ನೀಡಿದ್ದರು. ಒಂದು ವೇಳೆ ಅನಂತ್ ಕುಮಾರ್ ಎದುರು ಕಾಂಗ್ರೆಸ್ ತನ್ನ ಪಕ್ಷದಿಂದ ಸಮರ್ಥ ಅಭ್ಯರ್ಥಿ ನಿಲ್ಲಿಸದಿದ್ದಲ್ಲಿ ತಾನೇ ಈ ಕ್ಷೇತ್ರದಿಂದ ಕಣಕ್ಕಿಳಿಯುವೆ ಎಂದು ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನಿಲುವು ಏನೆಂದು ಕಾದು ನೋಡಬೇಕಿದೆ.
(ದಟ್ಸ್ ಕನ್ನಡ ವಾರ್ತೆ)