ಹಾವೇರಿಯಲ್ಲಿ ಎಬಿವಿಪಿ ಪ್ರತಿಭಟನೆ, ಲಾಠಿ ಚಾರ್ಜ್
ಹಾವೇರಿ, ಏ. 19 : ಅಖಿತ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರು ಶನಿವಾರ ಹಮ್ಮಿಕೊಂಡ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದ್ದು, ಈ ಸಂದರ್ಭದಲ್ಲಿ ಕಲ್ಲು ತೂರಾಟ, ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ. ಘಟನೆಯಲ್ಲಿ ಆರು ಜನ ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಿಲಾಗಿದೆ. ಉಳಿದ ನಾಲ್ಕು ಜನರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಎಬಿವಿಪಿ ಕಾರ್ಯಕರ್ತರು ನಡೆಸಿದ ಕಲ್ಲು ತೂರಾಟದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಅವರ ಜೀಪು, ಕಾಲೇಜು ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದ ಜೆಸಿಬಿ ಯಂತ್ರ ಹಾಗೂ ಮೂರು ಟಿಪ್ಪರ್ ಗಳು ಜಖಂಗೊಂಡಿವೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 40 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ತಾಲ್ಲೂಕಿನ ದೇವಗಿರಿಯ ಗೋಮಾಳ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಒಂದು ವಾರದಿಂದ ಹಂತ ಹಂತವಾಗಿ ಹೋರಾಟ ಆರಂಭಿಸಿದ ಎಬಿವಿಪಿ ಕಾರ್ಯಕರ್ತರು ಕಾಮಗಾರಿ ಸ್ಥಗಿತಗೊಳಿಸಲು ಏ. 18 ರ ಗಡುವು ಕೂಡಾ ನೀಡಿದ್ದರು. ಆದರೆ, ಗಡುವಿಗೆ ಜಿಲ್ಲಾಡಳಿತ ಸ್ಪಂದಿಸದೇ ಇದ್ದುದರಿಂದ ಎಬಿವಿಪಿ ಕಾರ್ಯಕರ್ತರು ಕಾಮಗಾರಿ ಸ್ಥಳಕ್ಕೆ ಆಗಮಿಸಿ ಕಲ್ಲು ಆರಂಭಿಸಿದರು. ಆಗ ನಾಲ್ಕು ವಾಹನಗಳು ಜಖಂಗೊಂಡಿವೆ.
(ದಟ್ಸ್ ಕನ್ನಡ ವಾರ್ತೆ)