ಅಂಬೇಡ್ಕರ್ ಅವಮಾನ : ರಾಯಚೂರು ಉದ್ನಿಗ್ನ
ರಾಯಚೂರು, ಏ. 20 : ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಆರೋಪದ ಮೇಲೆ ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಮನೋಹರ್ ಮಸ್ಕಿ ವಿರುದ್ದ ಸೋಮವಾರ ದಲಿತ ಸಂಘರ್ಷ ಸಮಿತಿ ರಾಯಚೂರು ಬಂದ್ ಕರೆ ನೀಡಿ ಪ್ರತಿಭಟನೆ ನಡೆಸಿತು. ಮಸ್ಕಿ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ಡಿಎಸ್ಎಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಹಿನ್ನೆಲೆಯಲ್ಲಿ ಒಂದು ಬಸ್ ಸುಟ್ಟು ಹಾಕಲಾಗಿದೆ. ಅನೇಕ ವಾಹನಗಳು ಜಖಂಗೊಂಡಿದ್ದು, ಅಲ್ಲಲ್ಲಿ ಕಲ್ಲು ತೂರಾಟ ನಡೆದಿವೆ. ಮುಂಜಾಗ್ರತಾ ಕ್ರಮವಾಗಿ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಇತ್ತೀಚೆಗೆ ಯಾದಗಿರಿಯಲ್ಲಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಮನೋಹರ್ ಮಸ್ಕಿ, ಅಂಬೇಡ್ಕರ್ ಅವರು ಸಂವಿಧಾನ ಬರೆದಿಲ್ಲ. ಸಂವಿಧಾನ ರೂಪಿಸುವ ಕರಡು ಸಮಿತಿಗೆ ಅಧ್ಯಕ್ಷರಾಗಿದ್ದರು ಎಂಬ ಹೇಳಿಕೆ ನೀಡಿದ್ದರು. ಅದರಿಂದ ಆಕ್ರೋಶಗೊಂಡ ಡಿಎಸ್ಎಸ್ ಇಂದು ಪ್ರತಿಭಟನೆ ಹಾಗೂ ಬಂದ್ ಹಮ್ಮಿಕೊಂಡಿದೆ. ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಮನೋಹರ ಮಸ್ಕಿ ವಿರುದ್ಧ ಘೋಷಣೆ ಕೂಗಿದ ಡಿಎಸ್ಎಸ್ ಅವರ ಪ್ರತಿಕೃತಿಯನ್ನು ಸುಟ್ಟು ಹಾಕಿದರು. ಪ್ರತಿಭಟನಾಕಾರ ಆಕ್ರೋಶಕ್ಕೆ ಬಸ್ ಸುಟ್ಟು ಭಸ್ಮವಾಗಿದ್ದು. ಅನೇಕ ವಾಹನಗಳು ಜಖಂಗೊಂಡಿವೆ. ಮನೋಹರ ಮಸ್ಕಿ ಅವರನ್ನು ಕೂಡಲೇ ಬಂಧಿಸುವಂತೆ ಪ್ರತಿಭಟನಾಕಾರ ಆಗ್ರಹಿಸಿದರು.
ಈ ಮಧ್ಯ ಸುರಪುರ ಪೊಲೀಸ್ ಠಾಣೆಗೆ ಶರಣಾದ ಮನೋಹರ್ ಮಸ್ಕಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಚಾರ ಸಭೆಯಲ್ಲಿ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಮುಂಜಾಗ್ರತಾ ಕ್ರಮವಾಗಿ ರಾಯಚೂರಿನಲ್ಲಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)