ಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ

ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ ಲಲಿತ ಮಹಲ್ ಹೆಲಿ ಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಕಾಂಗ್ರೆಸ್ ಪಕ್ಷದಲ್ಲಿನ ಒಳ ಜಗಳ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಂಗ್ರೆಸ್ ನಾಯಕರು ಕಣ್ಣ್ಣು,ಕಿವಿ ಇದ್ದರೂ ಕುರುಡಮತ್ತು ಮೂಕರಂತೆ ವರ್ತಿಸುತ್ತಿದ್ದಾರೆ.ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷವನ್ನು ಜನತೆ ವಿಸರ್ಜಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಬಿಜೆಪಿ ಪ್ರಾಬಲ್ಯ ದಿನೇದಿನೇ ಹೆಚ್ಚುತ್ತಿದ್ದು ಅದು ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ವಿನಾಕಾರಣ ಬಿಜೆಪಿ ಮೇಲೆ ಇಲ್ಲ ಸಲ್ಲದ ಆಪಾದನೆಗಳನ್ನು ಮಾಡುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸೋನಿಯಾಗಾಂಧಿ ರಾಜ್ಯಕ್ಕೆ ಬಂದಾಗ ಒಗ್ಗಟ್ಟು ಪ್ರದರ್ಶಿಸುವ ನಾಯಕರು ನಂತರ ಕಿತ್ತಾಟದಲ್ಲಿ ತೊಡಗುತ್ತಾರೆ. ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಬಿಜೆಪಿ ಪಕ್ಷದ ಮೇಲೆ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಆಪಾದಿಸಿದರು.
ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಕುರ್ಚಿಯ ಮೇಲೆ ಆಸೆ ಉಂಟಾಗಿದೆ. ಹೇಗಾದರೂ ಮಾಡಿ ಕುರ್ಚಿ ಪಡೆಯಲು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ರಾಜ್ಯದಲ್ಲಿ ಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್ ಸರ್ಕಾರ. ತಾವು ಮುಖ್ಯಮಂತ್ರಿಯಾದ ಮೇಲೆ ಒಂದೇ ಒಂದು ಗಣಿಗಾರಿಕೆಗೂ ಅವಕಾಶ ಕೊಟ್ಟಿಲ್ಲ ಎಂದು ಯಡಿಯೂರಪ್ಪ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿಗಳ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಎಸ್.ಎ.ರಾಮದಾಸ್, ಶಾಸಕ ಹೆಚ್.ಎಸ್.ಶಂಕರಲಿಂಗೇಗೌಡ, ವಿಧಾನ ಪರಿಷತ್ ಸದಸ್ಯ ತೋಂಟದಾರ್ಯ, ಮಾಜಿ ಸಚಿವ ವಿ ಸೋಮಣ್ಣ, ಮೈಸೂರು ನಗರ ಬಿಜೆಪಿ ಅಧ್ಯಕ್ಷ ಬಿ ಪಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಗೌಡ ಮತ್ತು ಬಿಜೆಪಿ ಕಾರ್ಯಕರ್ತರು ಬರಮಾಡಿಕೊಂಡರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications