ಸಿಎಂ ಆಪ್ತ ಕಾರ್ಯದರ್ಶಿ ವಿರುದ್ದ ಮೊಕದ್ದಮೆ
ಬೆಂಗಳೂರು, ಏ. 28 : ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅವರ ಆಪ್ತಕಾರ್ಯದರ್ಶಿ ನಂದಕುಮಾರ್ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಚುನಾವಣಾ ಆಯುಕ್ತ ಎಂ ಎನ್ ವಿದ್ಯಾಶಂಕರ್ ಹೇಳಿದರು.
ನಂದಕುಮಾರ್ ಹಣ ಹಂಚಿಕೆ ಪ್ರಕರಣ ಕುರಿತು ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದರಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ 129 ಹಾಗೂ ಭಾರತೀಯ ದಂಡ ಸಂಹಿತೆ ಪ್ರಕಾರ 171(ಬಿ) ಹಾಗೂ 171(ಸಿ) ಅಡಿ ಮೊಕದ್ದಮೆ ದಾಖಲಿಸಲಾಗಿದೆ. ಈ ಜಿಲ್ಲಾ ಚುನಾವಣಾ ಅಧಿಕಾರಿ ನೀಡಿರುವ ವರದಿ ಹಾಗೂ ಎಫ್ಐಆರ್ ಅನ್ನು ಕೇಂದ್ರ ಚುನಾವಣೆ ಆಯೋಗಕ್ಕೆ ರವಾನಿಸಲಾಗಿದೆ. ಅಲ್ಲಿಂದ ಏನು ಸೂಚನೆ ಬರಲಿದೆ ಎಂಬುದನ್ನು ನೋಡಿಕೊಂಡು ಕ್ರಮ ಜರುಗಿಸಲಾಗುವುದು ಎಂದರು.
ನಂದಕುಮಾರ್ ಬಳಸಿದ ಕಾರು, ವಿತರಿಸಲು ತಂದಿದ್ದ ಹಣ ಮೊದಲಾದ ದೂರಿನ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ನಂದಕುಮಾರ್ ಅವರನ್ನು ಸೇವೆಯಿಂದ ಅಮಾನತುಪಡಿಸುವ ನಿರ್ಧಾರ ತೆಗೆದುಕೊಳ್ಳುವುದು ರಾಜ್ಯ ಸರಕಾರಕ್ಕೆ ಬಿಟ್ಟದ್ದು ಎಂದು ಹೇಳಿದರು. ನಂದಕುಮಾರ್ ಅವರು ರಜೆಯ ಮೇಲೆ ಚಿಕ್ಕಮಗಳೂರಿಗೆ ಹೋಗಿದ್ದರು ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ. ಪ್ರಕರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ವರದಿ ಬಂದ ನಂತರ ವಾಸ್ತವಾಂಶ ತಿಳಿಯಲಿದೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು











Click it and Unblock the Notifications