ಮತಯಂತ್ರಗಳಿಗೆ ಪೂಜೆ ನಿಷೇಧ : ವಿದ್ಯಾಶಂಕರ್
ಬೆಂಗಳೂರು, ಏ. 28 : ಮತಗಟ್ಟೆಗಳಲ್ಲಿ ಅಭ್ಯರ್ಥಿಗಳು ಮತ ಯಂತ್ರಗಳಿಗೆ ಪೂಜೆ ಸಲ್ಲಿಸುವುದನ್ನು ಚುನಾವಣೆ ಆಯೋಗ ನಿಷೇಧ ಮಾಡಿದೆ. ಮೊದಲ ಹಂತದ ಚುನಾವಣೆ ನಡೆದ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ತಮ್ಮ ಪತ್ನಿ ಸಮೇತರಾಗಿ ಮತಗಟ್ಟೆಗಳಲ್ಲಿ ಯಂತ್ರಗಳಿಗೆ ಪೂಜೆ ಸಲ್ಲಿಸಿದ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎಂ ಎನ್ ವಿದ್ಯಾಶಂಕರ ಅವರು, ಕೋಲಾರ, ಬೆಂಗಳೂರು ಉತ್ತರ ಕ್ಷೇತ್ರಗಳ ಕ್ಷೇತ್ರಗಳಿಗೆ ಮತಗಟ್ಟೆಯಲ್ಲಿ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಸೆಕ್ಟರ್ ಅಫೀಸರ್ ಗಳಿಗೆ ನೋಟಿಸ್ ನೀಡಿ ವರದಿ ಕೋರಲಾಗಿದೆ ಎಂದರು. ಮೊದಲ ಹಂತದ ಚುನಾವಣೆಯಲ್ಲಿ ಆಗಿರುವ ತಪ್ಪುಗಳ ಹಿನ್ನೆಲೆಯಲ್ಲಿ ಕೆಲವೊಂದು ಕ್ರಮಗಳನ್ನು ಎರಡನೇ ಹಂತದ ಚುನಾವಣೆಯಲ್ಲಿ ಕೈಗೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಕೆಲವು ಅಂಶಗಳನ್ನು ಪಟ್ಟಿ ಮಾಡಿದ್ದು ಅದನ್ನು ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ನೀಡುವಂತೆ ಕ್ಷೇತ್ರ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿದ್ಯಾಶಂಕರ್ ವಿವರಿಸಿದರು.
(ದಟ್ಸ್ ಕನ್ನಡ ವಾರ್ತೆ)