ನಂದಕುಮಾರ್ ವಿರುದ್ಧ ವಿಚಾರಣೆಗೆ ಖುರೇಶಿ ಸೂಚನೆ
ಬೆಂಗಳೂರು, ಏ. 29 : ಚಿಕ್ಕಮಗಳೂರಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ನಂದಕುಮಾರ್ ವಿರುದ್ಧ ಇಲಾಖಾ ವಿಚಾರಣೆ ನಡೆಸುವಂತೆ ಚುನಾವಣಾ ಆಯುಕ್ತ ಡಾ ಎಸ್ ವೈ ಖುರೇಶಿ ಮಂಗಳವಾರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.
ರಾಜ್ಯದಲ್ಲಿ ಏಪ್ರಿಲ್ 30 ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಯ ಪರಿಶೀಲನೆ ನಡೆಸಲು ಬೆಂಗಳೂರಿಗೆ ಆಗಮಿಸಿರುವ ಅವರು, ವಿಧಾನಸೌಧದಲ್ಲಿ ಎಲ್ಲ 11 ಲೋಕಸಭೆ ಕ್ಷೇತ್ರಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ವರಿಷ್ಠಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಹಾಗೂ ರಾಜಕೀಯ ಮುಖಂಡರೊಂದಿಗೆ ಸಭೆ ನಡೆಸಿದರು.
ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಧಿಕಾರಿಯ ವಿರುದ್ಧ ಈಗಾಗಲೇ ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಐಸಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಜೊತೆಯಲ್ಲಿ ಇಲಾಖಾ ವಿಚಾರಣೆ ನಡೆಸುವಂತೆ ಆದೇಶ ನೀಡಲಾಗಿದೆ. ಅಗತ್ಯಬಿದ್ದರೆ ಅಧಿಕಾರಿಯನ್ನು ಅಮಾನತು ಮಾಡುತ್ತೇವೆ ಎಂದು ಖುರೇಶಿ ಹೇಳಿದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಆರತಿ ತಟ್ಟೆಗೆ ಹಣ ಹಾಕಿದ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಈ ಘಟನೆಯ ಸಿಡಿ ಚುನಾವಣಾ ಆಯೋಗಕ್ಕೆ ತಲುಪಿದೆ. ಬುಧವಾರ ನಡೆಯುವ ಪೂರ್ಣಪ್ರಮಾಣದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಎರಡನೇ ಹಂತದ ಚುನಾವಣೆಯಲ್ಲಿ ಶಾಂತಿಯುತವಾಗಿ ನಡೆಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಖುರೇಶಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications