ಎಚ್ಡಿಕೆ ವಿರುದ್ಧ ಕಾನೂನು ಕ್ರಮಕ್ಕೆ ಬಳಿಗಾರ್ ಆಗ್ರಹ
ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಮೇಲೆ ಅನಗತ್ಯವಾಗಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ವಿ.ಪಿ.ಬಳಿಗಾರ್ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಅಕ್ರಮ ಹಣ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ರಾಮನಗರದ ಜಿಲ್ಲಾಧಿಕಾರಿಗಳ ಮೇಲೆ ತಾವು ಒತ್ತಡ ತಂದಿರುವುದಾಗಿ ಕುಮಾರಸ್ವಾಮಿಯವರು ಮಾಡಿರುವ ಆರೋಪ ಸಂಪೂರ್ಣ ಸುಳ್ಳು. ಈ ಸಂಬಂಧ ಜಿಲ್ಲಾಧಿಕಾರಿ ಅಥವಾ ಮತ್ತಾವ ಅಧಿಕಾರಿಯ ಜೊತೆಯಲ್ಲಿ ತಾವು ಮಾತನಾಡಿಲ್ಲ. ಯಾವುದೇ ಸಮಾಲೋಚನೆಯನ್ನೂ ಮಾಡಿಲ್ಲ ಎಂದು ಬಳಿಗಾರ್ ರವರು ಸ್ಪಷ್ಟಪಡಿಸಿದ್ದಾರೆ.
ನನ್ನ ವೈಯಕ್ತಿಕ ಜೀವನದಲ್ಲಿ ಮತ್ತು ಆಡಳಿತದಲ್ಲಿ ನೈತಿಕತೆ ಹಾಗೂ ಉನ್ನತ ಮೌಲ್ಯಗಳನ್ನು ಕಾಯ್ದುಕೊಂಡು ಬಂದಿದ್ದೇನೆ. ಆತ್ಮ ಸಾಕ್ಷಿಗೆ ವಿರುದ್ಧವಾಗಿ ಯಾವುದೇ ಕೆಲಸ ಮಾಡಿಲ್ಲ. ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದೇನೆ. ಆದರೂ ಕೂಡ ಈ ರೀತಿ ಸುಳ್ಳು ಆರೋಪ ಮಾಡಿರುವುದು ವಿಷಾದನೀಯ ಮತ್ತು ಅವರಿಗೆ ಶೋಭೆ ತರುವಂತಹದಲ್ಲ. ಇದು ನನ್ನ ನೈತಿಕತೆಯನ್ನು ಉಡುಗಿಸುವ ಪ್ರಯತ್ನವಾಗಿದೆ ಎಂದು ಸ್ಪಷ್ಟಪಡಿಸಿರುವ ಬಳಿಗಾರ್ರವರು ಈ ವಿಚಾರವಾಗಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಸರ್ಕಾರದ ವತಿಯಿಂದ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಕೋರುವುದಾಗಿ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)