ಕಿರಿಯ ವೈದ್ಯರ ಮುಷ್ಕರ ಅಂತ್ಯ
ಬೆಂಗಳೂರು, ಮೇ. 4 : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಕಿರಿಯ ವೈದ್ಯರು ನಡೆಸುತ್ತಿದ್ದ ಮುಷ್ಕರ ಸೋಮವಾರ ಕೊನೆಗೊಂಡಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸದ್ಯದ ಮಟ್ಟಿಗೆ ವೈದ್ಯರ ಬೇಡಿಕೆಗಳಿಗೆ ಸ್ಪಂದಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಮದ್ಯೆ ಹೈಕೋರ್ಟ್ ಕೂಡಾ ಮುಷ್ಕರ ನಡೆಸುವುದು ಸರಿಯಲ್ಲ. ಮುಷ್ಕರ ಮುಂದುವರೆಸಿದ್ದೆ ಆದಲ್ಲಿ, ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕಿರಿಯ ವೈದ್ಯರು ಮುಷ್ಕರಕ್ಕೆ ಅಂತ್ಯ ಹಾಡಿದ್ದಾರೆ. ಚಿಕೂನ್ ಗುನ್ಯಾ, ಡೆಂಗೆ, ಹಂದಿಜ್ವರ ಸೇರಿದಂತೆ ಬೇಸಿಗೆಯಲ್ಲಿ ಬರುವ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿರುವ ಸಾರ್ವಜನಿಕರಿಗೆ ಆರೋಗ್ಯ ಕಾಪಾಡಲು ಕೂಡಲೇ ಕಿರಿಯ ವೈದ್ಯರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ನ್ಯಾಯಾಲಯ ವೈದ್ಯರಿಗೆ ತಾಕೀತು ಮಾಡಿದೆ.
ಕರ್ತವ್ಯಕ್ಕೆ ಹಾಜರಾಗಲು ಸಿಎಂ ಮನವಿ
ಮುಂದಿನ ದಿನಗಳಲ್ಲಿ ವೈದ್ಯರ ಬೇಡಿಕೆಗಳ ಬಗ್ಗೆ ಸೂಕ್ತ ಗಮನ ಹರಿಸಲಾಗುವುದು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಸದ್ಯದ ಮಟ್ಟಿದೆ ಬೇಡಿಕೆ ಈಡೇರಿಕೆ ಅಸಾಧ್ಯ. ಅಲ್ಲದೇ ರಾಜ್ಯದ ಆರ್ಥಿಕ ಪರಿಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲದ ಕಾರಣ, ವೈದ್ಯರು ಜೂನ್ ತಿಂಗಳವರೆಗೆ ಕಾಯಬೇಕು. ನಂತರದ ದಿನಗಳಲ್ಲಿ ಹಿರಿಯ ವೈದ್ಯರ ಮನವಿಗಳನ್ನು ಪುರಸ್ಕರಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಮುಷ್ಕರದಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟಾಗುತ್ತಿದ್ದು, ವೈದ್ಯರು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಅವರು ಮನವಿ ಮಾಡಿಕೊಂಡರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications