ಮಸ್ಕಿ ಗಡೀಪಾರಿಗೆ ದಲಿತ ಸಂಘಟನೆಗಳು ಆಗ್ರಹ
ಗಂಗಾವತಿ, ಮೇ. 5 : ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಮನೋಹರ್ ಮಸ್ಕಿ ಅವರು ಅವಹೇಳಕಾರಿ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ದಲಿತ ಸಂಘರ್ಷ ಸಮಿತಿ ಇಂದು ಕರೆ ನೀಡಿದ್ದ ಗಂಗಾವತಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ ಮುಂಗಟ್ಟುಗಳು ಬಹುತೇಕವಾಗಿ ಬಂದ್ ಮಾಡಿ ಬಂದ್ ನಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಯಾವುದೇ ಅಹಿತಕರ ಘಟನೆ ಜರುಗಿಲ್ಲ.
ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಆರೋಪದ ಮೇಲೆ ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಮನೋಹರ್ ಮಸ್ಕಿ ವಿರುದ್ದ ದಲಿತ ಸಂಘರ್ಷ ಸಮಿತಿಗಳು ರಾಯಚೂರು, ದಾವಣಗೆರೆ ಮತ್ತು ಯಾದಗಿರಿಯಲ್ಲಿ ಬಂದ್ ಕರೆ ಆಚರಿಸಲಾಗಿತ್ತು. ಇತ್ತೀಚೆಗೆ ಯಾದಗಿರಿಯಲ್ಲಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಮನೋಹರ್ ಮಸ್ಕಿ, ಅಂಬೇಡ್ಕರ್ ಅವರು ಸಂವಿಧಾನ ಬರೆದಿಲ್ಲ. ಸಂವಿಧಾನ ರೂಪಿಸುವ ಕರಡು ಸಮಿತಿಗೆ ಅಧ್ಯಕ್ಷರಾಗಿದ್ದರು ಎಂಬ ಹೇಳಿಕೆ ನೀಡಿದ್ದರು.
ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಮಸ್ಕಿಅವರನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಬೇಕು. ಅವರನ್ನು ರಾಜ್ಯದಿಂದ ಗಡೀಪಾರು ಮಾಡಬೇಕು. ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅವರನ್ನು ಬಂಧಿಸಬೇಕು ಎನ್ನುವುದು ದಲಿತ ಸಂಘಟನೆಗಳ ಒತ್ತಾಯವಾಗಿದೆ. ಹಾಗೂ ಮಸ್ಕಿ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ. ಘಟನೆಗೆ ಸಂಬಂಧಿಸಿದಂತೆ ಮನೋಹರ ಮಸ್ಕಿ ಅವರು ಈಗಾಗಲೇ ಕ್ಷಮೆ ಕೇಳಿದ್ದಾರೆ.
ಸುರಪುರ ಪೊಲೀಸ್ ಠಾಣೆಗೆ ಶರಣಾಗಿದ್ದ ಮನೋಹರ್ ಮಸ್ಕಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾದ್ದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು, ಪ್ರಚಾರ ಸಭೆಯಲ್ಲಿ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications