ಉಗ್ರವಾದವನ್ನು ಶಕ್ತಿಮೀರಿ ಎದುರಿಸೋಣ: ಬಿಎಸ್ ವೈ
ಬೆಂಗಳೂರು, ಮೇ.22: ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಭೆಯನ್ನುದ್ದೇಶಿಸಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಭೋದಿಸಿದರು. ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರ್ದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆಂದು ಈ ಮೂಲಕ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ.
ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ಫಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದರು.
ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಹಾಲಪ್ಪ, ಮುಖ್ಯ ಕಾರ್ಯದರ್ಶಿಗಳಾದ ಸುಧಾಕರ್ ರಾವ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಆರ್. ಪಿ. ಜಗದೀಶ್, ಕಾನೂನು ಸಲಹೆಗಾರರಾದ ದಿವಾಕರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ವಿ.ಪಿ. ಬಳಿಗಾರ್, ಕಾರ್ಯದರ್ಶಿಗಳಾದ ಲಕ್ಷ್ಮೀನಾರಾಯಣ, ಲೋಕಸಭೆಗೆ ನೂತನವಾಗಿ ಆಯ್ಕೆಗೊಂಡಿರುವ ಸಂಸತ್ ಸದಸ್ಯರಾದ ಜಿ. ವೈ ರಾಘವೇಂದ್ರ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಈ ಸಭೆಯಲ್ಲಿ ಹಾಜರಿದ್ದರು. ಆಡಳಿತ ಮತ್ತು ಸುಧಾರಣಾ ಇಲಾಖೆಯ ಕಾರ್ಯದರ್ಶಿ ಶ್ರೀನಿವಾಸ್ ಅವರು ಮೊದಲಿಗೆ ಸ್ವಾಗತಿಸಿದರು.
(ದಟ್ಸ್ ಕನ್ನಡ ವಾರ್ತೆ)