ಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ

ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಕೆಲವು ಸಚಿವರ ಚಲನವಲನಗಳ ಬಗ್ಗೆ ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿದೆ. ಸಿಎಂ ಟೆಲಿಫೋನ್ ಕದ್ದಾಲಿಕೆ ನಡೆಸಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪದಲ್ಲಿ ಎಳ್ಳಷ್ಟು ಸತ್ಯಾಂಶವಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ಪ್ರತಿ ತಿಂಗಳು ಇಲಾಖೆ ಪ್ರಗತಿ ಪರಿಶೀಲನೆ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಆ ಮೂಲಕ ಸಚಿವರ ಕಾರ್ಯವೈಖರಿ ಬಗ್ಗೆ ತಿಳಿದಂತಾಗುತ್ತದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು. ಸಚಿವರ ಮೇಲೆ ನಿಗಾ ಇಡುವಂತೆ ನಾವು ಗುಪ್ತಚರ ಇಲಾಖೆಗೆ ತಿಳಿಸಿಲ್ಲ. ಆ ರೀತಿಯ ವರದಿಯಲ್ಲಿ ಹುರುಳಿಲ್ಲ ಎಂದು ಯಡಿಯೂರಪ್ಪ ಹೇಳಿದರು.
ಸಿಎಂ ರಾಜೀನಾಮೆ ನೀಡಲಿ: ಕಾಂಗ್ರೆಸ್
ತನ್ನ ಸಂಪುಟ ಸಚಿವರ ಮೇಲೆ ನಂಬಿಕೆ ಇರದ ಮುಖ್ಯಮಂತ್ರಿ ಯಡಿಯೂರಪ್ಪನವರು ಟೆಲಿಫೋನ್ ಕದ್ದಾಲಿಕೆ, ಗುಪ್ತಚರ ದಳದಿಂದ ಮಾಹಿತಿ ಸಂಗ್ರಹ ಮುಂತಾದ ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಅಪನಂಬಿಕೆಯ ಸರ್ಕಾರ ನಡೆಸುತ್ತಿರುವ ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ಗುಡುಗಿದ್ದಾರೆ. ಈ ಮುಂಚೆ ಇದೇ ರೀತಿ ಟೆಲಿಫೋನ್ ಕದ್ದಾಲಿಕೆ ಆರೋಪ ಹೊತ್ತ ರಾಮಕೃಷ್ಣ ಹೆಗಡೆ ಅವರು ರಾಜೀನಾಮೆ ನೀಡಿದ್ದರು. ಇದು ಸುಳ್ಳು ಆರೋಪವಲ್ಲ. ಸಂಪುಟ ಸಹೋದ್ಯೋಗಿಗಳಾದ ಸುರೇಶ್ ಕುಮಾರ್, ಕೃಷ್ಣಯ್ಯ ಶೆಟ್ಟಿ, ಯೋಜನಾ ಆಯೋಗದ ಉಪಾಧ್ಯಕ್ಷ ಶಂಕರ ಮೂರ್ತಿ ಅವರಿಂದ ಕೂಡ ಈ ಬಗ್ಗೆ ಬಹಿರಂಗವಾದ ಆಕ್ಷೇಪಕ್ಕೆ ಸಿಎಂ ಒಳಗಾಗಿದ್ದಾರೆ ಎಂದು ಡಿಕೆ ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications