ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ, ಕಾಗೇರಿ
ಬೆಂಗಳೂರು, ಮೇ. 28 : ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ ಆಗಬೇಕೆಂಬ ಸರಕಾರದ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ. ಸರಕಾರದ ಈ ನಿರ್ಧಾರ ಪ್ರಶ್ನಿಸಿ ಆಂಗ್ಲ ಮಾಧ್ಯಮದ ಖಾಸಗಿ ಶಾಲೆಗಳು ನ್ಯಾಯಾಲಯದ ಮೊರೆ ಹೋಗಿವೆ. ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲು ಹೈಕೋರ್ಟ್ ಸರಕಾರಕ್ಕೆ ಗಡವು ನೀಡಿದೆ. ಸರಕಾರ ಈ ಸಂಬಂಧ ಸುಪ್ರೀಂಕೋರ್ಟ್ ಮೊರೆಹೋಗಲಿದೆ ಎಂದು ಕಾಗೇರಿ ತಿಳಿಸಿದ್ದಾರೆ.
ನೂತನ ಶೈಕ್ಷಣಿಕ ವರ್ಷ ಆರಂಭವಾಗುವ ಹಂತ ತಲುಪಿದ್ದರೂ ವಿವಾದ ಇನ್ನೂ ಬಗೆಹರಿದಿಲ್ಲ. ಈ ಹಿನ್ನಲೆಯಲ್ಲಿ ಸಚಿವ ಕಾಗೇರಿ ಕನ್ನಡಪರ ಸಂಘಟನೆ ಮುಖ್ಯಸ್ಥರ ಜೊತೆ ತಮ್ಮ ಕಚೇರಿಯಲ್ಲಿ ಮಾತುಕತೆ ನಡೆಸಿದರು. ಸರಕಾರ ಸಲ್ಲಿಸಿದ್ದ ಮೇಲ್ಮನವಿ ಬಗ್ಗೆ ನ್ಯಾಯಾಲಯದಲ್ಲಿ ಸದ್ಯದಲ್ಲೇ ವಿಚಾರಣೆ ನಡೆಯಲಿದೆ. ತೀರ್ಪು ನಮ್ಮ ಪರವಾಗಿ ಬರುವ ವಿಶ್ವಾಸವಿದೆ. ಒಂದು ವೇಳೆ ಸರಕಾರದ ವಿರುದ್ದ ತೀರ್ಪು ಬಂದರೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)