ಕಸ ಗೂಡಿಸಿ ಬೆಂಕಿ ಹಚ್ಚಬೇಡಿ : ಸುರೇಶಕುಮಾರ್
ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ತಜ್ಞ ವೈದ್ಯರ ಪ್ರಕಾರ ಇಂತಹ ಅನಿಲಯುಕ್ತ ಗಾಳಿ ಉಸಿರಾಡುವುದರಿಂದ ಪ್ರತಿ ವರ್ಷ ಸಾವಿರಾರು ಮಕ್ಕಳು ಕ್ಯಾನ್ಸರ್ ರೋಗಕ್ಕೆ ಒಳಗಾಗುತ್ತಿದ್ದಾರೆ ಎಂಬ ಅಂಶ ಸಮೀಕ್ಷೆ ಒಂದರಿಂದ ಖಚಿತವಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಗುರುತರ ಹೊಣೆ ಪ್ರತಿಯೊಂದು ನಗರಪಾಲಿಕೆಯದ್ದಾಗಿದ್ದು, ಇಂತಹ ಆತಂಕಕಾರಿ ವಿಚಾರದಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕಾದದ್ದು ಅತ್ಯಂತ ಅವಶ್ಯಕ. ಆದುದರಿಂದ ಇನ್ನು ಮುಂದೆ ಯಾವುದೇ ನಗರಪಾಲಿಕೆಯ ವ್ಯಾಪ್ತಿಯಲ್ಲಿ ಕಸ ಸುಡುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು ಹಾಗೂ ಕಸ ಸುಡುವವರನ್ನು ಗುರುತಿಸಿ ಅಂತಹವರ ವಿರುದ್ದ ದಂಡ ಹಾಕುವುದು ಸೇರಿದಂತೆ ಕಠಿಣ ಕ್ರಮ ಜರುಗಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.
ಈ ವಿಚಾರ ಅತ್ಯಂತ ಗಂಭೀರವಾಗಿದ್ದು ಈ ಬಗ್ಗೆ ಪಾಲಿಕೆಯ ಎಲ್ಲಾ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿ, ರೇಡಿಯೋ ಸೇರಿದಂತೆ ವಿವಿಧ ಸಮೂಹ ಮಾಧ್ಯಮಗಳಲ್ಲಿ ಪಾಲಿಕೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)