ಲೋಕಸಭಾಧ್ಯಕ್ಷರಾಗಿ ಕಿಶೋರ್ ಚಂದ್ರ ನೇಮಕ?
ನವದೆಹಲಿ, ಮೇ. 30 : 15 ನೇ ಲೋಕಸಭೆ ಲೋಕಸಭಾಧ್ಯಕ್ಷರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು, ಆಂಧ್ರಪ್ರದೇಶದ ಅರಕು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಸಂಸದ ಕಿಶೋರ್ ಚಂದ್ರ ದೇವೋ ಅವರು ಲೋಕಸಭಾಧ್ಯಕ್ಷರಾಗುವ ಸಾಧ್ಯತೆಗಳಿವೆ. ಇಂದು ಪ್ರಧಾನಮಂತ್ರಿ ನಿವಾಸದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಸಭಾಧ್ಯಕ್ಷ ಸ್ಥಾನಕ್ಕೆ ಕಿಶೋರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ, ಸಂಜೆ ವೇಳೆಗೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಆಂಧ್ರಪ್ರದೇಶ ಅರಕು ಕ್ಷೇತ್ರದಿಂದ ಐದು ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಕಿಶೋರ್ ಚಂದ್ರ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. 1947ರಲ್ಲಿ ಹಿಂದುಳಿದ ವರ್ಗದಲ್ಲಿ ಜನಿಸಿದ ಕಿಶೋರ್ ಚಂದ್ರ, 1980ರಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರದಲ್ಲಿ ಗಣಿ ಮತ್ತು ಕಲ್ಲಿದ್ದಲು ಖಾತೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಪಕ್ಷ ವಿವಿಧ ಹುದ್ದೆಗಳನ್ನು ಇವರು ಅಲಂಕರಿಸಿದ್ದಾರೆ. ಲೋಕಸಭಾಧ್ಯಕ್ಷ ಸ್ಥಾನಕ್ಕೆ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಅವರ ಹೆಸರು ಬಲವಾಗಿ ಕೇಳಿ ಬಂದಿತಾದರೂ ಅಂತಿಮವಾಗಿ ಕಿಶೋರ್ ಚಂದ್ರ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ.
(ಏಜನ್ಸೀಸ್)