ಜೂ.5ರಿಂದ ಕನ್ನಡೇತರ ನಾಮಫಲಕಗಳಿಗೆ ಮಸಿ
ಬೆಂಗಳೂರು, ಜೂ. 2: ಜೂನ್ 5ನೇ ತಾರೀಖಿನಿಂದ ಎಲ್ಲಾ ಕನ್ನಡೇತರ ನಾಮಫಲಕಗಳಿಗೆ ಮಸಿ ಬಳಿಯಲಾಗುವುದು ಎಂದು ಕನ್ನಡ ವೇದಿಕೆ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಕೆ.ಪ್ರಭಾಕರ ರೆಡ್ಡಿ ತಿಳಿಸಿದ್ದಾರೆ.
ಅಂಗಡಿ ಮುಂಗಟ್ಟುಗಳು, ವಾಣಿಜ್ಯೋದ್ಯಮ ಸಂಸ್ಥೆಗಳು ಮತ್ತು ಸಂಸ್ಥೆಗಳಿಗೆ ಸಂಬಂಧಪಟ್ಟ ಜಾಹೀರಾತುಗಳು ಕನ್ನಡದಲ್ಲಿರುವುದು ಕಡ್ಡಾಯ ಎಂದು ಸರಕಾರ ಏಳು ತಿಂಗಳಿನ ಹಿಂದೆ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪಾಲಿಸದವರಿಗೆ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದೂ ತನ್ನ ಆದೇಶದಲ್ಲಿ ತಿಳಿಸಿತ್ತು. ಆದರೆ ಈ ಬಗ್ಗೆ ಸರಕಾರ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಮಸಿ ಬಳಿಯುವ ಕ್ರಮ ಅನಿವಾರ್ಯ ಎಂದು ರೆಡ್ಡಿ ಹೇಳಿದರು.
ನಮ್ಮ ಈ ಹೋರಾಟವನ್ನು ಮೈಸೂರು ಬ್ಯಾಂಕ್ ವೃತ್ತದಿಂದ ಆರಂಭಿಸಲಿದ್ದೇವೆ, ಈ ಬಗ್ಗೆ ಸರಕಾರದ ವಿರುದ್ಧ ಧ್ವನಿಯೆತ್ತಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರೂ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ರೆಡ್ಡಿ ಆಹ್ವಾನ ನೀಡಿದರು.
ನಮ್ಮ ಈ ಹೋರಾಟಕ್ಕೆ ಎಲ್ಲಾ ಕನ್ನಡಪರ ಸಂಘಟನೆಗಳು ಬೆಂಬಲ ನೀಡಿ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ರೆಡ್ಡಿ ವಿನಂತಿಸಿದ್ದಾರೆ. ಮುಂಬರುವ ದಿನಗಳಲ್ಲಿ ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ರೆಡ್ಡಿ ಈ ಸಂದರ್ಭದಲ್ಲಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)