ಯಡಿಯೂರಪ್ಪ ರಾಜೀನಾಮೆಗೆ ಡಿಕೆಶಿ ಆಗ್ರಹ
ಬೆಂಗಳೂರು, ಜೂ.3: ಕಳೆದ ಲೋಕಸಭಾ ಚುನಾವಣೆಯಲ್ಲಿ ಹಣ, ಹೆಂಡ ಹಂಚಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ಸ್ವತಃ ಸಚಿವ ಈಶ್ವರಪ್ಪ ಬಹಿರಂಗವಾಗಿ ತನಿಖೆಗೆ ಆಗ್ರಹಿಸಿರುವ ಹಿನ್ನಲೆಯಲ್ಲಿ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹಣ, ಹೆಂಡ ಹಂಚಿ ಗೆಲುವು ಸಾಧಿಸಲಾಗಿದೆ ಎಂದು ಅವರದೇ ಸರಕಾರದ ಸಚಿವರು ಹೇಳುವ ಮೂಲಕ ರಾಜ್ಯ ಬಿಜೆಪಿ ಸರಕಾರ ಮತದಾರರನ್ನು ಭ್ರಷ್ಟರನ್ನಾಗಿಸಿದ್ದಾರೆ. ಈಶ್ವರಪ್ಪ ಹೇಳಿದಂತೆ ಯಾವುದೇ ತನಿಖೆಯ ಅಗತ್ಯವಿಲ್ಲ. ಈ ಎಲ್ಲಾ ಘಟನೆಗಳಿಗೆ ನೇರ ಹೊಣೆ ಮುಖ್ಯಮಂತ್ರಿಗಳು. ನಾವು ಚುನಾವಣೆಯಲ್ಲಿ ಅಧಿಕಾರಿಗಳ ದುರ್ಬಳಕೆ, ಅಕ್ರಮ ಹಣ ಹಂಚಿಕೆ, ಹೆಂಡದ ಹೊಳೆ ನಡೆದು ಆಡಳಿತ ಯಂತ್ರದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಜನತೆಗೆ ವಿವರಿಸುತ್ತಾ ಬಂದಿದ್ದೇವೆ.
ಮತಗಳಿಕೆಗಾಗಿ ಬಿಜೆಪಿ ಯಾವ ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದನ್ನು ಈ ಚುನಾವಣೆಯಲ್ಲಿ ತೋರಿಸಿಕೊಟ್ಟಿದೆ. ತಮ್ಮ ಮಗನನ್ನು ಶಿವಮೊಗ್ಗದಲ್ಲಿ ಇನ್ನಿಲ್ಲದ ಸಾಹಸ ಮಾಡಿ, ಹಣ ಹೆಂಡದ ಹೊಳೆ ಹರಿಸಿ ದೆಹಲಿಗೆ ಕಳುಹಿಸಿ ಕೊಟ್ಟಿದ್ದಾರೆ ಎನ್ನುವುದು ಜನಸಾಮಾನ್ಯರಿಗೆ ತಿಳಿಯದ ವಿಷಯವೇನೂ ಅಲ್ಲ. ಯಡಿಯೂರಪ್ಪ ಅವರಿಗೆ ಅವರ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಇಲ್ಲ, ಈ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications