ಜೂ 7ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ
ಬೆಂಗಳೂರು, ಜೂ. 5 : ಕೊನೆಗೂ ಸಿದ್ದರಾಮಯ್ಯ ಅವರ ಕನಸು ಈಡೇರುವ ಕಾಲ ಸಮೀಪಿಸುತ್ತಿದೆ. ಜೂನ್ 7 ರಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಅವರೇ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.
ಬಹುದಿನಗಳಿಂದ ಈ ಹುದ್ದೆಯ ನಿರೀಕ್ಷೆಯಲ್ಲಿರುವ ಸಿದ್ದರಾಮಯ್ಯ ಅವರು ಹುದ್ದೆಗಾಗಿ ಪಕ್ಷದಲ್ಲಿ ಪೈಪೋಟಿ ನಡೆಯುವ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಇನ್ನು ತಡ ಮಾಡಬೇಡಿ ಎಂದು ಪಕ್ಷದ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡಲು ಬುಧವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇದಾದ 24 ಗಂಟೆಗಳಲ್ಲಿ ಶಾಸಕಾಂಗ ನಾಯಕನ ಆಯ್ಕೆಗೆ ಸಮಯ ನಿಗದಿ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕ ಯಾರಾಗಬೇಕು ಎಂಬ ಬಗ್ಗೆ ಎಲ್ಲ ಶಾಸಕರ ಅಭಿಪ್ರಾಯವನ್ನು ಮೌಖಿಕವಾಗಿ ಅಥವಾ ಲಿಖಿತವಾಗಿ ಗುಲಾಂ ನಬಿ ಅಜಾದ್ ಪಡೆದುಕೊಳ್ಳಬಹುದು. ಈ ದಿನವೇ ನೂತನ ಶಾಸಕಾಂಗ ನಾಯಕರ ಘೋಷಣೆಯಾಗಬಹುದು. ನಂಬಲರ್ಹ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರೆ ಶಾಸಕಾಂಗ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications