ಉಗ್ರರ ದಾಳಿಯ ಭೀತಿ; ರಾಜ್ಯಾದ್ಯಂತ ಕಟ್ಟೆಚ್ಚರ
ಬೆಂಗಳೂರು, ಜೂ.6: ದಕ್ಷಿಣ ಭಾರತದ ಪ್ರಮುಖ ನಗರಗಳ ಮೇಲೆ ಲಷ್ಕರ್ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂಬ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.
ಕೇಂದ್ರ ಗುಪ್ತಚರ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಗುಪ್ತಚರ ಘಟಕ ಹಾಗೂ ಭಯೋತ್ಪಾದಕ ನಿಗ್ರಹ ದಳ ಸೇರಿದಂತೆ ವಿಶೇಷ ಪೊಲೀಸ್ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದ ಗಡಿಯೊಳಕ್ಕೆ ನುಸುಳಿರುವ ಮೂವರು ಉಗ್ರರು ಆಂಧ್ರಪ್ರದೇಶದ ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಾಧ್ಯತೆಗಳಿದ್ದು, ಕರ್ನಾಟಕವೂ ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂಬ ಕೇಂದ್ರ ಸರಕಾರದ ಸಂದೇಶ ಗುರುವಾರ ರಾತ್ರಿ ತಲುಪಿದೆ ಎಂದು ಗೃಹಸಚಿವ ವಿ.ಎಸ್. ಆಚಾರ್ಯ ಹೇಳಿದ್ದಾರೆ.
ಗುಪ್ತಚರ ಇಲಾಖೆಯನ್ನು ಜಾಗೃತ ಸ್ಥಿತಿಯಲ್ಲಿ ಇರಿಸಲಾಗಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ವಿಶೇಷ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications