ರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ
ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು ಹಾಗೂ ಶಾಸಕರ ಸಭೆ ನಡೆಸಿ ಆರು ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ತಾವು ಹೇಳಿದರನ್ನು ಮಂತ್ರಿ ಮಾಡಬೇಕು ಎಂಬ ಷರತ್ತು ವಿಧಿಸಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಪ್ರಮುಖರು ಯಡಿಯೂರಪ್ಪ ಜತೆ ಚರ್ಚಿಸಿದ್ದಾರೆ. ಇದೇ ಸಂದರ್ಭದಲ್ಲಿ ಸರಕಾರದ ಸುಭದ್ರತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಅನುಸರಿಸಬೇಕಾದ ರಾಜನೀತಿ ಕುರಿತು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸರಕಾರದ ಸ್ಥಿರತೆಗೆ ದಕ್ಕೆ ತರಲು ಯತ್ನಿಸುತ್ತಿರುವವರ ಬೆದರಿಕೆ ತಂತ್ರ ಒಡ್ಡಿರುವ ಸಚಿವರು ಹಾಗೂ ಅವರ ಜತೆ ಗುರುತಿಸಿಕೊಂಡಿರುವ ಶಾಸಕರ ವಿರುದ್ಧ ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸಬೇಕೆಂದು ಆರ್ಎಸ್ಎಸ್ ಮುಖಂಡರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ, ತಮ್ಮ ವರ್ತನೆ ತಿದ್ದಿಕೊಂಡು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಬೇಕೆಂದು ಮುಖ್ಯಮಂತ್ರಿಗೆ ಬುದ್ಧಿವಾದ ಹೇಳಿದ್ದಾರೆ. ಅನಗತ್ಯ ಬೆಳವಣಿಗೆಗೆ ಆಸ್ಪದ ನೀಡದಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)