ಪರಿಸರ ಸಂರಕ್ಷಣಾ ನಿಗಮ ಸ್ಥಾಪನೆ, ಜೈರಾಮ್
ಬೆಂಗಳೂರು, ಜೂ. 9 : ಪರಿಸರ ಯೋಜನೆಗಳಿಗೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ಅನುಷ್ಠಾನಗೊಳಿಸಲು ಪರಿಸರ ಸಂರಕ್ಷಣಾ ನಿಗಮವನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆಯ ರಾಜ್ಯ ಸಚಿವ ಜೈರಾಮ್ ರಮೇಶ್ ಹೇಳಿದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಅರಣ್ಯ ಇಲಾಖೆ, ಪರಿಸರ ಹಾಗೂ ಇಂಧನ ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರಾವಳಿ ರೆಗ್ಯುಲೇಟರಿ ಪಡೆಯ ಸರಕಾರಿ ಅಧಿಸೂಚನೆಯನ್ನು ಕೂಡಾ ಪುನರ್ ಪರಿಶೀಲನೆ ಮಾಡಲಾಗುವುದು ಎಂದರು. ಮುಂದಿನ ಕೆಲವೆ ತಿಂಗಳಲ್ಲಿ ಪರಿಸರ ಸಂರಕ್ಷಣೆ ನಿಗಮ ಸ್ಥಾಪಿಸಲಾಗುವುದು ಎಂದು ಹೇಳಿದರು.
ಅಧಿಕಾರಿಗಳಿಗೆ ಸಿಎಂ ಸೂಚನೆ
ನಂತರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು ಸರಕಾರದ ವೇಗಕ್ಕೆ ತಕ್ಕಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಜನಸಾಮಾನ್ಯರಿಗಾಗಿ ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಅವುಗಳು ಜನರಿಗೆ ತಲುಪದಿದ್ದರೆ ಪ್ರಯೋಜನವಿಲ್ಲ. ಆದ್ದರಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ತಪ್ಪಿದರೆ ಶಿಸ್ತು ಕ್ರಮ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)