ಆಶ್ರಯ ಮನೆಗಳನ್ನು ಪೂರ್ಣಗೊಳಿಸಲು ಸೂಚನೆ
ಬೆಳಗಾವಿ, ಜೂ. 11 : ಪ್ರವಾಹ ಪೀಡಿತ ಗ್ರಾಮಗಳಿಗೆ ಮಂಜೂರಾದ ಆಶ್ರಯ ಮನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದ ಅವರು ಆಶ್ರಯ ಮನೆಗಳನ್ನು ನಿರ್ಮಿಸಲು 30 ಸಾವಿರ ರೂ. ನೀಡಲಾಗುತ್ತಿದೆ. ಆದರೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ಮೊತ್ತದಲ್ಲಿ ಮನೆ ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ಕಾರಣ ಉದ್ಯೋಗ ಖಾತ್ರಿ ಯೋಜನೆಯಿಂದ 10 ಸಾವಿರ ರೂ.ಗಳನ್ನು ತಲಾ ಒಂದು ಮನೆಗೆ ಉಪಯೋಗಿಸಿಕೊಳ್ಳಬೇಕು. ಈ ಕುರಿತು ಸರಕಾರದಿಂದ ಆದೇಶ ಪಡೆಯಬೇಕೆಂದು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ಕುರಿತು ಮಾತನಾಡಿದ ಸಚಿವರು. ಪ್ರತಿ ವ್ಯಕ್ತಿಗೆ ಪ್ರತಿದಿನ 40 ಲೀಟರ್ ನೀರಿನ ಅವಶ್ಯಕತೆಯಿದೆ. ಈ ಪ್ರಮಾಣದಲ್ಲಿ ನೀರು ಒದಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಅಲ್ಲಿ ಬದಲಿ ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಪೂರೈಸುವ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿಯ ಪರಿಸ್ಥಿತಿ ಅಧ್ಯಯನ ಮಾಡಬೇಕೆಂದು ಸೂಚಿಸಿದರು.
ಚುನಾವಣಾ ನೀತಿ ಸಂಹಿತೆಯಿಂದ ನಿಂತು ಹೋಗಿದ್ದ ಪಡಿತರ ಚೀಟಿ ವಿತರಣೆ ಕಾರ್ಯವನ್ನು ತಕ್ಷಣದಿಂದಲೇ ಪ್ರಾರಂಭಿಸುವಂತೆ ಆದೇಶ ನೀಡಿದ ಸಚಿವರು, ಮುಂದಿನ 20 ದಿನಗಳಲ್ಲಿ ಪಡಿತರ ಚೀಟಿ ವಿತರಣೆ ಕಾರ್ಯ ಪೂರ್ಣಗೊಳಿಸಬೇಕೆಂದು ಹೇಳಿದರು. ಪಡಿತರ ಅಂಗಡಿಗಳು ಸರಿಯಾಗಿ ಆಹಾರಧಾನ್ಯ ವಿತರಿಸದ ಬಗ್ಗೆ ದೂರುಗಳು ಇದ್ದು, ಈ ಬಗ್ಗೆಯೂ ತನಿಖೆ ನಡೆಸಬೇಕೆಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications