ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಸೌಲಭ್ಯ : ಡಿವಿಎಸ್
ಚಿಕ್ಕಮಗಳೂರು, ಜೂ. 11 : ಸರ್ವಶಿಕ್ಷಾ ಅಭಿಯಾನ ಯೋಜನೆಯ ಜಾರಿಯಿಂದಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂದು ಅತಿ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಸಹಕಾರಿಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಡಿ.ವಿ.ಸದಾನಂದಗೌಡ ಅವರು ಹೇಳಿದ್ದಾರೆ.
ನಗರದ ಬಸವನಹಳ್ಳಿಯ ಬಾಲಿಕಾ ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನ ಕೊಠಡಿ ಹಾಗೂ ಆಂಗ್ಲ ಮಾದ್ಯಮ ತರಗತಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಯೋಜನೆಯ ಜಾರಿಯಿಂದಾಗಿ ಶಾಲೆಗಳ ಮೂಲಭೂತ ಸೌಲಭ್ಯಗಳ ಪೂರೈಕೆ ಜೊತೆಗೆ ಶಿಕ್ಷಕರ ಕೊರತೆಗಳನ್ನು ಸಹ ತುಂಬಲು ಹೆಚ್ಚು ಸಹಕಾರಿಯಾಗಿದೆ ಎಂದರು. ಶಿಕ್ಷಣ ಕ್ಷೇತ್ರದಲ್ಲಿ ಇಂದು ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಮುಂಚೂಣಿಯಲ್ಲಿವೆ ಎಂದು ತಿಳಿಸಿದರಲ್ಲದೆ, ಜೊತೆಗೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಶಿಕ್ಷಕರುಗಳು ಸಹ ಹೆಚ್ಚಿನ ಶ್ರಮ ವಹಿಸುತ್ತಿದ್ದಾರೆಂದು ಹೇಳಿದರು.
ವಿದ್ಯಾರ್ಥಿಗಳು ತಮ್ಮ ಹೆಚ್ಚಿನ ಸಮಯವನ್ನು ಓದಿಗಾಗಿ ಮೀಸಲಿಡುವುದರ ಮೂಲಕ ಉತ್ತಮ ವ್ಯಾಸಂಗ ಮಾಡಿ ಸಮಾಜದ ದೊಡ್ಡ ಶಕ್ತಿಯಾಗಿ ಬೆಳೆದು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಸಂಸದರಾದ ಸದಾನಂದಗೌಡರು ಹೇಳಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ಸಹ ಅವರು ವಿತರಿಸಿದರು.
ಶಾಸಕ ಸಿ.ಟಿ.ರವಿ ಅಧ್ಯಕ್ಷತೆ ವಹಿಸಿದ್ದರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವರಸಿದ್ದ ವೇಣುಗೋಪಾಲ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್, ಪ್ರಾಂಶುಪಾಲರಾದ ಉಮೇಶ್, ಮತ್ತಿತರ ಗಣ್ಯರುಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೇಲಿಂಗಾಚಾರ್ ಸ್ವಾಗತಿಸಿ ವಂದಿಸಿದರು.
(ದಟ್ಸ್ ಕನ್ನಡ ವಾರ್ತೆ)