ಎಚ್ಡಿಕೆ, ಶಿವನಗೌಡ ನಾಯಕ್ ವಿರುದ್ಧ ವಾರೆಂಟ್

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಎಸ್ ಎಂ ಚಲವಾದಿ ಅವರು ವಿಚಾರಣೆಗೆ ಹಾಜರಾಗದ ಕಾರಣ ಕುಮಾರಸ್ವಾಮಿ ಹಾಗೂ ಸಚಿವ ಶಿವನಗೌಡ ನಾಯಕ್ ಅವರ ವಿರುದ್ಧ ಬಂಧನದ ವಾರೆಂಟ್ ಹೊರಡಿಸಿದ್ದಾರೆ. ನ್ಯಾಯಾಲಯದ ಎದುರು ಹಾಜರಾಗುವಂತೆ ಕುಮಾರಸ್ವಾಮಿ ಹಾಗೂ ಶಿವನಗೌಡ ನಾಯಕ ಅವರಿಗೆ ಎರಡು ಬಾರಿ ನೋಟೀಸ್ ಜಾರಿಗೊಳಿಸಿದರೂ ಈ ಇಬ್ಬರು ನ್ಯಾಯಾಲಯದ ಮುಂದೆ ಹಾಜರಾಗಿಲ್ಲ ಎಕೆ ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ.
ಸಂಸತ್ ಕಲಾಪ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಂಸದ ಕುಮಾರಸ್ವಾಮಿ ನ್ಯಾಯಾಲಯದ ಎದುರು ಹಾಜರಾಗಲು ಸಾಧ್ಯವಾಗಿಲ್ಲ. ಮುಂದಿನ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯದ ಎದುರು ಕುಮಾರಸ್ವಾಮಿ ಹಾಜರಾಗಲಿದ್ದಾರೆ ಎಂದು ಅವರ ಪರ ವಕೀಲ ಶಿವಶಂಕರ್ ಮಾಡಿದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು ಬಂಧನದ ಆದೇಶ ಹೊರಡಿಸಿದರು.
ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಶಿವನಗೌಡ ನಾಯಕ ದೇವದುರ್ಗ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಕುಮಾರಸ್ವಾಮಿ ದೇವದುರ್ಗಕ್ಕೆ ಚುನಾವಣೆ ಪ್ರಚಾರದಲ್ಲಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಆಗ ಅವಧಿ ಮೀರಿ ಚುನಾವಣೆ ಪ್ರಚಾರ ಮಾಡಿದ್ದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಜೆಡಿಎಸ್ ಪಕ್ಷದಿಂದ ಆಯ್ಕೆಯಾದ ಶಿವನಗೌಡ ನಾಯಕ್, ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಗೊಂಡು ಮರುಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿ ಇದೀಗ ಗ್ರಂಥಾಲಯ ಖಾತೆ ಸಚಿವರಾಗಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications