ಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ
ಬೆಂಗಳೂರು, ಜೂ.20: ಸರಕಾರದ ಜನಪರ ಯೋಜನೆಗಳಿಗೆ ಸ್ಪಂದಿಸದ, ಅದಕ್ಷ ಅಧಿಕಾರಗಳಿಗೆ 'ಕಡ್ಡಾಯ ನಿವೃತ್ತಿ' ನೀಡಲು ರಾಜ್ಯ ಸರಕಾರ ಮುಂದಾಗಿದೆ. ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.
ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಸಿದ್ದಾರೆ. ಐಎಎಸ್, ಐಪಿಎಸ್, ಐಎಫ್ ಎಸ್ ಮತ್ತು ಕೆಎಎಸ್ ಅಧಿಕಾರಿಗಳ ಕಾರ್ಯವೈಖರಿ ಮೇಲೆ ಕಣ್ಣಿಡುವಂತೆ ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಅವರಿಗೆ ಎಚ್ಚರಿಕೆ ನೀಡಿ, ಬದ್ಧತೆಯಿಂದ ಕೆಲಸ ಮಾಡುವಂತೆ ಕಿವಿ ಮಾತು ಹೇಳಿ ಎಂದು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಮೂರು ತಿಂಗಳಲ್ಲಿ ಕಾರ್ಯದಕ್ಷತೆಯನ್ನು ರೂಢಿಸಿಕೊಳ್ಳದ ಅಧಿಕಾರಿಗಳಿಗೆ ಮುಲಾಜಿಲ್ಲದೆ ಕಡ್ಡಾಯ ನಿವೃತ್ತಿ ನೀಡಿ ಎಂದು ಯಡಿಯೂರಪ್ಪ ಆಜ್ಞಾಪಿಸಿದ್ದಾರೆ.
ಈ ಸೂಚನೆಗೂ ಬಗ್ಗದ ಅಧಿಕಾರಿಗಳನ್ನು ಮನೆಗೆ ಕಳುಹಿಸಲು ಸರಕಾರ ಸೂಚಿಸಿದೆ. ಜಡ್ಡುಗಟ್ಟಿರುವ ಅಧಿಕಾರಿಗಳಿಗೆ ಬುದ್ಧಿ ಕಲಿಸಲು ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ಆಡಳಿತ ಯಂತ್ರವನ್ನು ಚುರುಕುಗೊಳಿಸಿ ಸರಕಾರದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜನಸಾಮನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಲು ಯಡಿಯೂರಪ್ಪ ಸರಕಾರ ಮುಂದಾಗಿದೆ.
(ದಟ್ಸ್ ಕನ್ನಡ ವಾರ್ತೆ)