ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ : ಡಿಸಿ ಸಭೆ
ಶಿವಮೊಗ್ಗ, ಜೂ. 25 : ಮುಂಗಾರು ಆರಂಭವಾಗಿದ್ದರೂ ಜಿಲ್ಲೆಯಲ್ಲಿ ಈ ಬಾರಿ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದೆ ಕೆಲವೊಂದು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಲಕ್ಷಣಗಳು ಕಾಣಬರುತ್ತಿದ್ದು, ಅಧಿಕಾರಿಗಳು ಕೂಡಲೆ ಕೆಲವೊಂದು ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಂಕಜ್ಕುಮಾರ್ ಪಾಂಡೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಕಛೇರಿ ಸಭಾಂಗಣದಲ್ಲಿ ಪ್ರವಾಹದಿಂದಾಗುವ ಅನಾಹುತಗಳ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಕರೆಯಲಾಗಿದ್ದ ಸಭೆಯಲ್ಲಿ ಮಳೆಕುಂಠಿತದಿಂದಾಗಿ ಜಿಲ್ಲೆಯ ಕೆಲವೊಂದು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಕೂಡಲೆ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಸಂಬಂಧ ಚರ್ಚೆ ನಡೆಸಿದರು.
ತಾಲ್ಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂಗಳನ್ನು ತೆರೆದು ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಬರುವ ದೂರುಗಳನ್ನು ದಾಖಲಿಸಿಕೊಂಡು ಕೂಡಲೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕೆಂದರು. ತಾಲ್ಲೂಕು ಮಟ್ಟದ ಅಧಿಕಾರಿಗಳು ಕೂಡಲೆ ಕುಡಿಯುವ ನೀರಿನ ಸಮಸ್ಯೆಯುಳ್ಳ ಗ್ರಾಮಗಳ ಪಟ್ಟಿಮಾಡಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದರಲ್ಲದೆ, ಪರಿಹಾರಕ್ಕೆ ಕಾರ್ಯಕ್ರಮ ರೂಪಿಸಬೇಕೆಂದರು.
ಈಗಾಗಲೇ ಬೋರ್ ವೆಲ್ ಕೊರೆದಿದ್ದು, ಕಾರಣಾಂತರದಿಂದ ವಿದ್ಯುತ್ ಸಂಪರ್ಕ ಕಲ್ಪಿಸದಿರುವಂತ ಪ್ರಕರಣಗಳಲ್ಲಿ ಕೂಡಲೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯಕೈಗೊಳ್ಳಬೇಕೆಂದು ತಿಳಿಸಿದರು. ಅತಿವೃಷ್ಟಿಯಿಂದಾಗುವ ಪ್ರವಾಹ ಮತ್ತಿತರೆ ಅನಾಹುತಗಳ ಬಗ್ಗೆಯು ಚರ್ಚೆ ನಡೆಸಿದ ಜಿಲ್ಲಾಧಿಕಾರಿಗಳು ಮಳೆಯಿಂದಾಗಿ ಪ್ರತಿ ವರ್ಷ ಜಿಲ್ಲೆಯಲ್ಲಿ ಅನಾಹುತಗಳಾಗುತ್ತಿದ್ದು, ಈ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು.
ಪ್ರವಾಹ ಪೀಡಿತ ಪ್ರದೇಶಗಳ ಪಟ್ಟಿಯನ್ನು ಸಿದ್ದಪಡಿಸಿಕೊಂಡು ಆ ಪ್ರದೇಶದಲ್ಲಿ ಮುನ್ನೆಚ್ಚರಿಕೆಯಾಗಿ ಕೈಗೊಳ್ಳಬಹುದಾದ ಕಾರ್ಯಗಳನ್ನು ಈ ಕೂಡಲೆ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಅನಾಹುತಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಎಚ್ಚರ ವಹಿಸುವಂತೆ ಸೂಚಿಸಬೇಕು. ಕೆರೆ, ಕಟ್ಟೆ , ಮೋರಿ, ಸೇತುವೆಗಳಲ್ಲಿ ನೀರು ಸರಾಗವಾಗಿ ಹರಿದುಹೋಗುವಂತೆ ನೋಡಿಕೋಳ್ಳುವುದು, ಪ್ರವಾಹ ಪೀಡಿತ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು, ಅಗತ್ಯ ಬಿದ್ದಲ್ಲಿ ಗಂಜಿ ಕೇಂದ್ರ ತೆರೆಯುವುದು, ಜನ, ಜಾನುವಾರು, ಮೃತಪಟ್ಟರೆ ಕೂಡಲೆ ಪರಿಹಾರ ನೀಡುವುದು, ರೋಗರುಜಿನಗಳು ಸಂಭವಿಸಿದರೆ ತುರ್ತಾಗಿ ಚಿಕಿತ್ಸಾ ಕಾರ್ಯ ಕೈಗೊಳ್ಳುವುದು, ರಸ್ತೆ ಬದಿಯಿರುವ ಮರಗಳ ಕೊಂಬೆ, ರೆಂಬೆಗಳನ್ನು ತೆಗೆದು ಅನಾಹುತಗಳಾಗದಂತೆ ಎಚ್ಚರ ವಹಿಸಬೇಕೆಂದು ಜಿಲ್ಲಾಧಿಕರಿಗಳು ಅಧಿಕಾರಿಗಳಿಗೆ ಸೂಚಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications