ಚಿಕ್ಕಬಳ್ಳಾಪುರ : ಕುಡಿಯುವ ನೀರಿನ ಸಮಸ್ಯೆಗೆ ಕ್ರಮ
ಚಿಕ್ಕಬಳ್ಳಾಪುರ, ಜೂ. 27 : ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಅನ್ವರ್ ಪಾಷಾ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಅಂತಹ ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು. ಈಗಾಗಲೇ ಟೆಂಡರ್ ಕರೆದಿದ್ದು ಯಾವುದೇ ರೀತಿಯಲ್ಲಿಯು ಗ್ರಾಮಸ್ಥರು ಸಮಸ್ಯೆಗೆ ಒಳಗಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಸರ್ಕಾರದ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಪಿ.ರವಿಕುಮಾರ್, ಮಾತನಾಡಿ ಓವರ್ ಟ್ಯಾಂಕ್ ನಿರ್ಮಿಸುವುದರ ಬಗ್ಗೆ ಸೂಕ್ತ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ ಸೂಚಿಸಿದರು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ನಿರ್ದೇಶಕ ಸಿ.ಜಾಫರ್ ಮಾತನಾಡಿ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಇದೆ. ಈ ಯೋಜನೆಯಿಂದ ಸಿಗುವ ಸೌಲಭ್ಯಗಳು ಮತ್ತು ಅವಕಾಶಗಳ ಕುರಿತು ಎಲ್ಲಾರಿಗೂ ತಿಳಿಸಬೇಕಾಗಿದೆ.
(ದಟ್ಸ್ ಕನ್ನಡ ವಾರ್ತೆ)