ಹೊಗೇನಕಲ್ ವಿವಾದ : ಸಿಎಂ ಕಾನೂನು ಮೊರೆ
ಬೆಂಗಳೂರು, ಜೂ. 30 : ವಿವಾದಿತ ಹೊಗೇನಕಲ್ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರ ಅಭಿಪ್ರಾಯ ಸಂಗ್ರಹಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ರಾಜ್ಯದ ಜನತೆಯ ಹಿತ ಮುಖ್ಯ. ಜನರು ಹಿತಾಸಕ್ತಿಗೆ ವಿರುದ್ಧ ಯಾವ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದರು. ರಾಜ್ಯ ಸರಕಾರ ಈಗಾಗಲೇ ಕೇಂದ್ರ ಸರಕಾರದ ಮೊರೆ ಹೋಗಿದ್ದು, ಗಡಿ ಸರ್ವೆ ನಡೆಸಲು ಮನವಿ ಮಾಡಿಕೊಳ್ಳಲಾಗಿದೆ. ಆದರೆ, ತಮಿಳುನಾಡು ಸರಕಾರ ಕಾನೂನಿಗೆ ವಿರುದ್ಧವಾಗಿ ಕಾನೂನು ಉಲ್ಲಂಘಿಸಿ ಹೊಗೇನಕಲ್ ಕುಡಿಯುವ ನೀರಿನ ಯೋಜನೆ ರೂಪಿಸಿದೆ. ಇದಕ್ಕೆ ಕರ್ನಾಟಕ ಸರಕಾರ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.
ತಮಿಳುನಾಡು ಉಪಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಹೊಗೇನಕಲ್ ವಿವಾದ ಎರಡು ನಡುವೆ ಉಂಟಾಗಿರುವ ಗಂಭೀರ ಸಮಸ್ಯೆಯಾಗಿದೆ. ಕೂಡಲೇ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು. ಅದಕ್ಕೂ ಮೊದಲು ಗಡಿ ಜಂಟಿ ಸರ್ವೆ ಕಾರ್ಯ ನಡೆಯಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದರು.
ಇತ್ತೀಚೆಗೆ ಸ್ಟಾಲಿನ್ ಅವರು ನಿಗದಿತ ಅವಧಿಯಲ್ಲಿ ಹೊಗೇನಕಲ್ ಕುಡಿಯುವ ನೀರಿನ ಯೋಜನೆ ಪೂರ್ಣಗೊಳ್ಳಲಿದೆ. 1,344 ಕೋಟಿ ರುಪಾಯಿಗಳ ಯೋಜನೆ ಇದಾಗಿದ್ದು, ಈ ಯೋಜನೆ ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಈ ಯೋಜನೆ ಪೂರ್ಣಗೊಂಡರೆ ಮೂರ್ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿಗಿಸಿದಂತಾಗುತ್ತದೆ ಎಂದು ಅವರು ಹೇಳಿದ್ದರು.
ರಾಜ್ಯ ಸರಕಾರ ಈ ಬಗ್ಗೆ ಕೇಂದ್ರ ಸರಕಾರದ ಗಮನಕ್ಕೆ ತಂದಿದೆ. ವಿಧಾನಸಭೆ ಚುನಾವಣೆಗೂ ಮುಂಚೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಮುಖಂಡರು ಹಾಗೂ ಚಾಮರಾಜನಗರ ಜಿಲ್ಲೆಯ ಬಿಜೆಪಿ ಘಟಕ ತಮಿಳುನಾಡು ಸರಕಾರ ನಿರ್ಮಿಸಲು ಉದ್ದೇಶಿಸಿರುವ ಯೋಜನೆ ಸ್ಥಳಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದರು.
(ದಟ್ಸ್ ಕನ್ನಡ ವಾರ್ತೆ)