ಮಾಧ್ಯಮ ವಿವಿ ಸ್ಥಾಪನೆಗೆ ಚಿಂತನೆ : ಆಚಾರ್ಯ
ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದ ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗಿರುವ ಪತ್ರಿಕೋದ್ಯಮಕ್ಕೆ ರಾಜ್ಯ ಸರಕಾರ ವಿಶೇಷ ಅದ್ಯತೆ ನೀಡಲು ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಪ್ರಥಮ ಬಾರಿಗೆ ಮಾಧ್ಯಮಕ್ಕೆ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಿದ ಕೀರ್ತಿ ರಾಜ್ಯಕ್ಕೆ ಸಲ್ಲಲಿದೆ ಎಂದರು.
ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಪಾತ್ರ ಮುಖ್ಯವಾದದ್ದು. ಸಮಾಜದ ಓರೆಕೋರೆಗಳನ್ನು ತಿದ್ದುವಲ್ಲಿ, ಸರಕಾರ ಮೈಮರೆತಾಗ ಲೇಖನಗಳ ಮೂಲಕ ಎಚ್ಚರಿಸುವ ಕೆಲಸ ಶ್ಲಾಘನೀಯ. ಮಾಧ್ಯಮವನ್ನು ಇನ್ನಷ್ಟು ಬಲಪಡಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಮಾಧ್ಯಮ ವಿಶ್ವವಿದ್ಯಾಲಯ ಸ್ಥಾಪನೆಯಿಂದ ಪ್ರತಿಭಾವಂತ ಪತ್ರಕರ್ತರನ್ನು ರೂಪಿಸಬಹುದು ಎಂದು ಆಚಾರ್ಯ ಹೇಳಿದರು.
ಸರಕಾರದ ವತಿಯಿಂದ ನೀಡುವ ಟಿಎಸ್ಆರ್ ಪ್ರಶಸ್ತಿಯ ಮೌಲ್ಯವನ್ನು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಈ ವರ್ಷದಿಂದ ಪ್ರಶಸ್ತಿಯ ಮೊತ್ತವನ್ನು 1 ಲಕ್ಷದಿಂದ 2 ಲಕ್ಷ ರುಪಾಯಿಗೆ ಏರಿಸಲಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಆಚಾರ್ಯ ಹೇಳಿದರು.
ನಂತರ ಮಾತನಾಡಿದ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಬೆಂಗಳೂರು ಪತ್ರಕರ್ತರ ಕಟ್ಟಡ ಪತ್ರಿಕಾ ಭವನಕ್ಕೆ ಸರಕಾರದ ವತಿಯಿಂದ 3 ಕೋಟಿ ರುಪಾಯಿಗಳನ್ನು ಬಿಡುಗಡೆಗೊಳಿಸಲಾಗಿದೆ. ಪತ್ರಕರ್ತರ ಕಲ್ಯಾಣ ನಿಧಿಗೆ 50 ಲಕ್ಷ ರುಪಾಯಿ ಹಾಗೂ ಗ್ರಾಮೀಣ ಭಾಗದ ಪತ್ರಕರ್ತರಿಗೆ ಯಶಸ್ವಿನಿ ಯೋಜನೆ ವಿಸ್ತರಿಸಲಾಗುವುದು ಎಂದರು.
(ದಟ್ಸ್ ಕನ್ನಡ ವಾರ್ತೆ)