ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫಲ ನೀಡಿದ ಶೋಭಾ ರಾಯಭಾರ

By Staff
|
Google Oneindia Kannada News

Shobha Karandlaje
ಬೆಂಗಳೂರು, ಜುಲೈ 4:ಜಲ ನಿರ್ಮಲ್ ಯೋಜನೆಯ ಎರಡನೇ ಹಂತದ ಅನುಷ್ಠಾನಕ್ಕಾಗಿ ವಿಶ್ವ ಬ್ಯಾಂಕ್ ಒಂದು ಸಾವಿರ ಕೋಟಿ ರೂಪಾಯಿಗಳಿಗೆ ಅನುಮೋದನೆ ನೀಡಿದೆ.ಪ್ರಸಕ್ತ ಅಮೆರಿಕ ಪ್ರವಾಸದಲ್ಲಿರುವ ಗ್ರಾಮೀಣಾಭಿವೃದ್ಧಿ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರನ್ನು ಒಳಗೊಂಡಿರುವ ನಿಯೋಗವು ಇಂದು ವಿಶ್ವಬ್ಯಾಂಕಿನ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಈ ಅನುಮೋದನೆ ಪ್ರಾಪ್ತವಾಯಿತು.

ಈ ಭೇಟಿಯ ವೇಳೆ ರಾಜ್ಯದ 15 ಜಿಲ್ಲೆಗಳಲ್ಲಿ ಜಲ ನಿರ್ಮಲ್ ಯೋಜನೆಯನ್ನು ಎರಡನೇ ಹಂತದಲ್ಲಿ ಅನುಷ್ಠಾನಗೊಳಿಸಲು ಉದೇಶಿಸಲಾಗಿತ್ತು. ಇದಕ್ಕಾಗಿ ಅವಶ್ಯಕವಿರುವ ಒಂದು ಸಾವಿರ ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ವಿಶ್ವಬ್ಯಾಂಕ್ ಅನುಮೋದನೆ ನೀಡಿದೆ ಎಂದು ದೂರವಾಣಿ ಮೂಲಕ ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ.

ಈ ಯೋಜನೆಯನ್ನು ಮೊದಲ ಹಂತದಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಅನುಷ್ಠಾನ ಗೊಳಿಸಲಾಗಿದೆ.ಇದೇ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಹಾಗೂ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಅಭಿವೃದ್ಧಿಗಾಗಿ ಅನುದಾನವನ್ನು ಬಿಡುಗಡೆ ಮಾಡುವಂತೆ ವಿಶ್ವಬ್ಯಾಂಕಿನ ಅಧಿಕಾರಿಗಳನ್ನು ಕೋರಿದರು.

ಕೆರೆ ಮತ್ತು ರಸ್ತೆಗಳ ಅಭಿವೃದ್ಧಿಗಾಗಿ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಲು ವಿಶ್ವಬ್ಯಾಂಕ್ ತಾತ್ವಿಕವಾಗಿ ಒಪ್ಪಿಗೆ ನೀಡಿ, ಪ್ರಸ್ತಾವನೆಯನ್ನು ಕಳುಹಿಸುವಂತೆ ಸೂಚಿಸಿದೆ ಎಂದು ಸಚಿವರು ತಿಳಿಸಿದ್ದಾರೆ.ಸಚಿವರು ನಿನ್ನೆ ಅಮೆರಿಕಾ ಸರಕಾರದ ಸ್ಥಳೀಯ ಆಡಳಿತ ಕ್ಷೇತ್ರದ ಪರಿತಣರೊಂದಿಗೆ ಚರ್ಚೆ ನಡೆಸಿದ್ದರು. ಹಾಗೆಯೇ, ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ, ನೀರು ಕೊಯ್ಲು, ಗ್ರಾಮೀಣ ಸಾರಿಗೆ ಮತ್ತು ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸುವ ಹಿನ್ನೆಲೆಯೊಂದಿಗೆ ಅಮೆರಿಕ ಪ್ರವಾಸವನ್ನು ಕೈಗೊಂಡಿದ್ದಾರೆ.

ವಿಶ್ವಬ್ಯಾಂಕಿನ ಅಧಿಕಾರಿಗಳನ್ನು ಭೇಟಿ ಮಾಡಿದ ನಿಯೋಗದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಕೆ.ಆರ್. ಶಶೀಧರ್ ಹಾಗೂ ಜಲ ನಿರ್ಮಲ್ ಯೋಜನೆಯ ನಿರ್ದೇಶಕ ಅನಿಲ್ ಕುಮಾರ್ ಅವರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X