371 ಕಲಂ ತಿದ್ದುಪಡಿ : ಗುಲ್ಬರ್ಗಾ ಬಂದ್ ಯಶಸ್ವಿ
ಗುಲ್ಬರ್ಗಾ, ಜು. 14 : ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ದಿಗೆ ಸಂಬಂಧಿಸಿದಂತೆ ಸೆಕ್ಷನ್ 371 ನ್ನು ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿ ಇಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಹೈದರಾಬಾದ್ ಕರ್ನಾಟಕ ವಾಣಿಜ್ಯ ಮಂಡಳಿ ನೀಡಿದ ಬಂದ್ ಕರೆ ಬಹುತೇಕ ಯಶಸ್ವಿಯಾಗಿದೆ.
ಬಂದ್ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟು ಮುಚ್ಚಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ವ್ಯಾಪಕ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದ್ದು, ಈವರೆಗೂ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ಅನೇಕ ದಶಕಗಳಿಂದ ಆ ಪ್ರದೇಶದ ಜನರ ನಾಡಿಮಿಡಿತದ ವಿರುದ್ಧ ಕೆಲಸ ಮಾಡುತ್ತಿರುವ ಸರಕಾರದ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಬಂದ್ ಗೆ ಎಲ್ಲ ವಲಯಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವ್ಯಾಪಾರ ವಹಿವಾಟು, ಪೆಟ್ರೋಲ್ ಬಂಕ್, ಚಿತ್ರಮಂದಿರ ಮತ್ತು ಬ್ಯಾಂಕ್ ಗಳಿಗೆ ರಜೆ ನೀಡಲಾಗಿದೆ.
ಬಂದ್ ಹಿನ್ನೆಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ಅಗತ್ಯ ಬಸ್ ಸೇವೆ ಬಿಟ್ಟು ಉಳಿದ ಬಸ್ ಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಬಂದ್ ಶಾಂತಿಯುತವಾಗಿ ನಡೆಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಬಿ ವೈ ಯಲ್ಲಪ್ಪ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)