ಕೋಲಾರ ಪ್ರವಾಸಿ ತಾಣವಾಗಿ ಅಭಿವೃದ್ಧಿ : ರೆಡ್ಡಿ
ಬೆಂಗಳೂರು,ಜು . 17 : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಚಿವ ಜಿ.ಜನಾರ್ಧನ ರೆಡ್ಡಿ ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿ ವೈ.ಎ. ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, ವಿಶ್ವೇಶ್ವರಯ್ಯನವರ ಜನ್ಮಸ್ಥಳವಾದ ಮುದ್ದೇನಹಳ್ಳಿಯಲ್ಲಿ ಮ್ಯೂಸಿಯಂ ಮತ್ತು ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ 50 ಲಕ್ಷ ರೂ. ನೀಡಲಾಗಿದೆ. ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಮುಳಬಾಗಿಲು, ಆವಣಿ, ಕೈವಾರ, ವಿದುರಾಶ್ವಥ, ನಂದಿ, ಮುರುಗಮಲ್ಲ, ಮಿಣಕನಗುರ್ಕಿ, ಅಂತರಗಂಗೆ, ಚಿಕ್ಕತಿರುಪತಿ ಮುಂತಾದ ಪ್ರವಾಸಿ ತಾಣಗಳಿಗಾಗಿ 265 ಲಕ್ಷ ರೂ ವೆಚ್ಷ ಮಾಡಲಾಗಿದೆ. ವಿದುರಾಶ್ವಥವನ್ನು 5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಲು ಅನುವಾಗುವಂತೆ ಕೆ.ಎಸ್.ಟಿ.ಡಿ.ಸಿ ಯ ಮೂಲಕ ಒಂದು ದಿನದ ಪ್ಯಾಕೇಜ್ ಟೂರ್ನ ವ್ಯವಸ್ಥೆ ಮಾಡಲಾಗುವುದೆಂದು ಸಚಿವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)