ಮಳೆಹಾನಿ ಪರಿಹಾರಕ್ಕೆ ಕೇಂದ್ರ ಮೊರೆಹೋಗಲು ನಿರ್ಧಾರ
ಬೆಂಗಳೂರು, ಜು. 18 : ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಎರಡುಪಟ್ಟು ಹೆಚ್ಚಿಗೆ ಮಳೆ ಸುರಿಯುತ್ತಿದ್ದರೂ ಮಳೆರಾಯ ತನ್ನ ಪ್ರಕೋಪವನ್ನು ನಿಲ್ಲಿಸಿಲ್ಲ. ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಲ್ಲಿ ಬೆಳೆ ಮತ್ತು ಆಸ್ತಿಪಾಸ್ತಿಗೆ ಅಪಾರವಾದ ಹಾನಿ ಸಂಭವಿಸಿದೆ.
ಸುಮಾರು 500 ಕೋಟಿ ರು.ಗೂ ಹೆಚ್ಚಿನ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಕೇಂದ್ರಕ್ಕೆ ಸಹಾಯಹಸ್ತ ಚಾಚಲು ರಾಜ್ಯ ಸರಕಾರ ನಿರ್ಧರಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 29 ವರ್ಷಗಳಲ್ಲಿ ಈ ಪರಿಯ ಮಳೆ ಎಂದೂ ಆಗಿರಲಿಲ್ಲ. ರಾಜ್ಯದಲ್ಲಿ 75ಕ್ಕೂ ಹೆಚ್ಚಿನ ಜನ ಸಾವಿಗೀಡಾಗಿದ್ದಾರೆ ಮತ್ತು ಒಂದೂವರೆ ಸಾವಿರಕ್ಕಿಂತ ಹೆಚ್ಚಿನ ಮನೆಗಳು ನೆಲಸಮವಾಗಿವೆ.
ಮಹಾರಾಷ್ಟ್ರದಲ್ಲಿ ಕೂಡ ಭಾರಿ ಮಳೆ ಸುರಿಯುತ್ತಿರುವುದರ ಪರಿಣಾಮ ಬೆಳಗಾವಿ ಜಿಲ್ಲೆಯ ಮೇಲಾಗುತ್ತಿದೆ. ಪ್ರತಿವರ್ಷದಂತೆ ಅಲ್ಲಿನ ಕೊಯ್ನಾ ಡ್ಯಾಮಿನಿಂದ ಬಿಡುತ್ತಿರುವ ಹೆಚ್ಚಿನ ನೀರಿನಿಂದಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನೇಕ ಗ್ರಾಮಗಳು ಮುಳುಗಡೆಯ ಹಂತ ತಲುಪಿವೆ. ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ವಿದ್ಯುತ್ ಉತ್ಪಾದನೆ : ಬಾಗಲಕೋಟೆ ಜಿಲ್ಲೆಯಲ್ಲಿ ಕೂಡ ಉತ್ತಮ ಮಳೆಯಾಗಿದ್ದರಿಂದ ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ಇದರಿಂದಾಗಿ ಆಲಮಟ್ಟಿ ವಿದ್ಯುತ್ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಪ್ರಾರಂಭವಾಗಲಿದೆ.
ವಿದ್ಯುತ್ ಉತ್ಪಾದನೆ ಕುರಿತಂತೆ ಶಿವಮೊಗ್ಗದಲ್ಲಿ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಈಶ್ವರಪ್ಪ, ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವುದರಿಂದ ಯಾವುದೇ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಎಂದಿದ್ದಾರೆ. ವಿದ್ಯುತ್ ಉತ್ಪಾದನೆಗೆ ಸಂಬಂಧಿಸಿದಂತೆ ರಾಜ್ಯ ಸ್ವಾವಲಂಬಿಯಾಗಲು ರಾಜ್ಯ ಪ್ರಯತ್ನ ಮುಂದುವರಿಸಲಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ 2500 ಮೆಗಾವ್ಯಾಟ್ ನಷ್ಟು ವಿದ್ಯುತ್ ಕೊರತೆಯಿದೆ. ಕೇಂದ್ರದಿಂದ ಸಾವಿರ ಮೆಗಾವ್ಯಾಟ್ ವಿದ್ಯುತ್ ಮಾತ್ರ ಬರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)