ವಿದ್ಯಾರ್ಥಿಗಳಿಗೆ ಮುಮಂ ಚಂದ್ರು ಕನ್ನಡ ಪಾಠ
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶನಿವಾರ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಜುಲೈ 22 ರಂದು ನಗರದ ರಮಣಶ್ರೀ ಉದಯ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ. ಎಂ.ಎಚ್. ಕೃಷ್ಣಯ್ಯ ಅವರು ಕನ್ನಡ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಕಾಲೇಜು ವಿದ್ಯಾರ್ಥಿಗಳಲ್ಲಿ ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದ ಮುಖ್ಯಮಂತ್ರಿ ಚಂದ್ರು ಅವರು ಕನ್ನಡ ಜಾಗೃತಿ, ಕನ್ನಡ ಸಾಹಿತ್ಯಕ್ಕೆ ಜಾನಪದದ ಕೊಡುಗೆ, ಕನ್ನಡ ಸಂಸ್ಕೃತಿ ನಮ್ಮ ಹೆಮ್ಮೆ, ಭಾರತೀಯ ಸಂಸ್ಕೃತಿಗೆ ಕನ್ನಡದ ಕೊಡುಗೆ, ಕನ್ನಡ ಹಾಗೂ ಪ್ರಾಚೀನತೆ ಆಧುನಿಕ ಕುರಿತ ಒಂದು ವಿವೇಚನೆ ಹಾಗೂ ಕನ್ನಡ ರಂಗಭೂಮಿಯ ಕೊಡುಗೆ ವಿಷಯಗಳಿಗೆ ಸಂಬಂಧಿಸಿದಂತೆ ಕಾಲೇಜುಗಳಲ್ಲಿ ಉಪನ್ಯಾಸ ಮಾಲಿಕೆಗಳನ್ನು ಏರ್ಪಡಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಕನ್ನಡ ನುಡಿ ಹಬ್ಬದ ಅಂಗವಾಗಿ ನಾಡು - ನುಡಿ ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಗುಲಬರ್ಗಾದಲ್ಲಿ ಇದೆ 29 ರಿಂದ ಜಾನಪದಜಾತ್ರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಕನ್ನಡ ಬಾರದ ಅಧಿಕಾರಿಗಳು ಹಾಗೂ ನೌಕರರಿಗೆ ಕನ್ನಡ ಕಲಿಸುವ ತರಬೇತಿ ಕಾರ್ಯಕ್ರಮಗಳನ್ನು ಪ್ರಾಧಿಕಾರ ಹಮ್ಮಿಕೊಳ್ಳಲಿದೆ ಎಂದರು.
ರಾಜ್ಯ ಮತ್ತು ಹೊರದೇಶಗಳಲ್ಲಿರುವ ಕನ್ನಡ ಅಧ್ಯಯನ ಪೀಠಗಳ ಅಭಿವೃದ್ಧಿಗೆ ಪ್ರಾಧಿಕಾರವು ಹೆಚ್ಚು ಒತ್ತು ನೀಡಲಿದೆ. ಕನ್ನಡ ಭಾಷೆಗೆ ಇತ್ತೀಚೆಗೆ ಶಾಸ್ತ್ರೀಯ ಸ್ಥಾನಮಾನ ದೊರಕಿದೆ. ಆದರೆ ಶಾಸ್ತ್ರೀಯ ಭಾಷೆಗೆ ದೊರಕುವ ಸೌಲಭ್ಯ ಪಡೆಯಲು ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ತಿಳಿಸಿದರು.ರಾಜ್ಯಪಾಲರನ್ನು ಇತ್ತೀಚೆಗೆ ಭೇಟಿಮಾಡಿ ಕನ್ನಡ ಬೆಳವಣಿಗೆಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು ಎಂದು ಇದೇ ಸಂದರ್ಭದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದರು.
(ದಟ್ಸ್ ಕನ್ನಡ ವಾರ್ತೆ)