ರಾಜ್ಯದ ಆರ್ಥಿಕ ಸ್ಥಿತಿಗತಿ ದೃಢವಾಗಿದೆ; ಬಿಎಸ್ ವೈ
ಬೆಂಗಳೂರಿನಲ್ಲಿ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ಶನಿವಾರ ಆರಂಭವಾಯಿತು. ಈ ಸಂದರ್ಭದಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪ, ವಿರೋಧ ಪಕ್ಷಗಳು ಸುಳ್ಳು ಅಂಕಿ ಅಂಶ ನೀಡಿ ರಾಜ್ಯದ ಜನತೆಗೆ ತಪ್ಪು ಮಾಹಿತಿ ನೀಡುತ್ತ್ತಿರುವ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಜಾಗತಿಕ ಆರ್ಥಿಕ ಹಿನ್ನೆಡೆ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಸದೃಢವಾಗಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಸೇರಿದಂತೆ ಹಲವು ಆರ್ಥಿಕ ತಜ್ಞರು ಮೆಚ್ಚುಗೆ ವ್ಯಕ್ತಪಡಿಸಿದ್ದರು ಎಂದು ಯಡಿಯೂರಪ್ಪ ಸಮರ್ಥನೆ ನೀಡಿದರು.
ವಿರೋಧ ಪಕ್ಷಗಳು ವಾಸ್ತವ ಅಂಶಗಳನ್ನು ಮುಚ್ಚಿಟ್ಟು ಜನರಲ್ಲಿ ಗೊಂದಲ ಮೂಡಿಸುತ್ತಿವೆ. ಈ ಬಗ್ಗೆ ವಿರೋಧ ಪಕ್ಷಗಳೊಂದಿಗೆ ತಾವು ಬಹಿರಂಗ ಚರ್ಚೆಗೆ ಸಿದ್ಧ ಎಂದರು. ರಾಜ್ಯದಲ್ಲಿ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ರಸ್ತೆ, ನೀರಾವರಿ ಕ್ಷೇತ್ರಗಳ ಅಭಿವೃದ್ಧಿಗೆ ಗಮನ ನೀಡಲಾಗುತ್ತಿದೆ ಎಂದರು.
ಮುಂಬರುವ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳು ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಪ್ರತಿಯೊಬ್ಬ ಸಚಿವರು ಕಾರ್ಯಕರ್ತರು ಈ ಚುನಾವಣೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಪಕ್ಷದ ಗೆಲುವಿಗೆ ಗಮನ ಹರಿಸುವಂತೆ ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಯಿತು. ಬಿಬಿಎಂಪಿ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಕಾರ್ಯತಂತ್ರವನ್ನು ರೂಪಿಸುವ ಬಗ್ಗೆಯೂ ಮಾತುಕತೆ ನಡೆಯಿತು.
ರಾಜ್ಯದಲ್ಲಿ ಪಕ್ಷದ ವರ್ಚಸ್ಸನ್ನು ವೃದ್ಧಿಸುವತ್ತ ಗಮನ ನೀಡಬೇಕಾಗಿದೆ. ಹಳೆ ಮೈಸೂರಿನ ಕೆಲ ಭಾಗಗಳಲ್ಲಿ ಪಕ್ಷವನ್ನು ಮತ್ತ್ತಷ್ಟು ವಿಸ್ತರಿಸುವ ಕೆಲಸ ಆಗಬೇಕಾಗಿದೆ. ಪಕ್ಷ ಬಲಗೊಳಿಸುವ ಉದ್ದೇಶದಿಂದ 25 ಲಕ್ಷ ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್, ಗೃಹ ಸಚಿವ ಡಾ.ವಿ ಎಸ್ ಆಚಾರ್ಯ, ಸೇರಿದಂತೆ ಬಿಜೆಪಿ ಶಾಸಕರು, ಸಂಸದರು, ಸಚಿವರು ಮುಖಂಡರು ಭಾಗವಹಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)