ತಿರುವಳ್ಳುವರ್ ಅನಾವರಣ ಖಚಿತ : ಆಚಾರ್ಯ
ಪ್ರತಿಮೆ ಅನಾವರಣ ಸಂಬಂಧ ಮಂಗಳವಾರ ಪೊಲೀಸ್ ಇಲಾಖೆ, ಬಿಬಿಎಂಪಿ ಅಧಿಕಾರಿಗಳು ಹಾಗೂ ಮತ್ತಿತರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಇದೇ 9 ರಂದು ನಗರದಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮ ಸುಗಮವಾಗಿ ನಡೆಯಲು ಪೂರ್ವಭಾವಿಯಾಗಿ ಭದ್ರತೆ ಸೇರಿದಂತೆ ಮತ್ತಿತರ ಮುನ್ನೆಚ್ಚರಿಕೆ ವಿಷಯಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದರು.
ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಕುರಿತು ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಪಕ್ಷಗಳು, ಸಾಹಿತಿಗಳು, ಕನ್ನಡಪರ ಸಂಘಟನೆಗಳಿಂದ ಪೂರ್ಣ ಸಹಮತ ವ್ಯಕ್ತವಾಗಿದೆ. ಇದರಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಶೇ. 95 ಮಂದಿ ಪ್ರತಿಮೆ ಅನಾವರಣಕ್ಕೆ ಸಹಮತ ಸೂಚಿಸಿದ್ದಾರೆ ಎಂದರು. ವಿರೋಧ ವ್ಯಕ್ತಪಡಿಸುವವರ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿರುವ ಅಗತ್ಯವಿಲ್ಲ ಎಂದು ಆಚಾರ್ಯ ಹೇಳಿದರು.
ಪ್ರತಿಮೆ ಅನಾವರಣ ದಿನದಂದು ಮುನ್ನೆಚ್ಚರಿಕೆ ಕ್ರಮವಾಗಿ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗುವುದು. ಈಗಾಗಲೇ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಆಚಾರ್ಯ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)