ಬಿಜೆಪಿಯಲ್ಲಿ ಅತೃಪ್ತಿಯಿದೆ ಅಶಿಸ್ತಿಲ್ಲ : ಸದಾನಂದ ಗೌಡ
ಗುರುವಾರ ಬೆಳಿಗ್ಗೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ನವೆಂಬರ್ ಕೊನೆಯ ಹಂತದಲ್ಲಿ ರಾಜ್ಯ ಬಿಜೆಪಿ ಘಟಕದ ಚುನಾವಣೆ ನಡೆಯಲಿದ್ದು, ಆನಂತರದಲ್ಲಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಚುನಾವಣೆ ನಡೆಯಲಿದೆ ಎಂದು ವಿವರಿಸಿದರು.
ರಾಜ್ಯದ ಮಂತ್ರಿಗಳ ಕಾರ್ಯವೈಖರಿ ಕುರಿತು ಈಗಾಗಲೇ ವರದಿಗಳು ಬಂದಿದ್ದು, ಈ ಬಗ್ಗೆ ಉಪಚುನಾವಣೆಯ ಫಲಿತಾಂಶದ ನಂತರದಲ್ಲಿ ಪರಾಮರ್ಶಿಸಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗುವುದು. ಮಂತ್ರಿಗಳನ್ನು ಬದಲಾಯಿಸುವ ಅಧಿಕಾರ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ನನ್ನದೇನಿದ್ದರೂ ಸಂಘಟನೆ ಮತ್ತು ಪಕ್ಷ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ.ವಿ.ಸದಾನಂದ ಗೌಡ ಹೇಳಿದರು.
ಉಪಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದ್ದು, ಈ ಚುನಾವಣೆಯಲ್ಲಿ ಬಿಜೆಪಿಗೆ ಮೂರು ಮತ್ತೊಂದು ಸ್ಥಾನ ಸಿಗಲಿದೆ ಎಂಬ ಭರವಸೆ ನಮ್ಮದು. ಈ ಚುನಾವಣೆಯ ಫಲಿತಾಂಶ ಪರೋಕ್ಷವಾಗಿ ಸರ್ಕಾರದ ಕಾರ್ಯಕ್ರಮಗಳ ಅಳತೆಗೋಲು ಆಗಲಿದೆ. ಈ ಉಪಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಲ್ಲ. ಇದು ಜೆಡಿಎಸ್ ಮತ್ತು ಕಾಂಗ್ರೆಸ್ಗೆ ಪ್ರತಿಷ್ಠೆಯ ಪ್ರಶ್ನೆ ಕೂಡ. ಈ ಎರಡೂ ಪಕ್ಷಗಳು ಒಂದು ಸ್ಥಾನ ಕಳೆದುಕೊಂಡರೂ ಅವರ ಪಕ್ಷದ ಸರ್ವನಾಶವಾಗಲಿದೆ ಎಂದು ತಿಳಿಸಿದರು.
ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಇರುವ ಗೊಂದಲವನ್ನು ಬಗೆಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಪಚುನಾವಣೆಯ ನಂತರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.
ಈ ಸುದ್ದಿಗೋಷ್ಠಿಯಲ್ಲಿ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಜಿ.ಕುಮಾರಸ್ವಾಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಗಿರೀಶ್ ಪಟೇಲ್, ನಗರಸಭಾ ಅಧ್ಯಕ್ಷ ಎನ್.ಜೆ.ರಾಜಶೇಖರ್, ಭಾನುಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.