ಎಚ್1ಎನ್1: ಖಾಸಗಿ ಆಸ್ಪತ್ರೆಗಳಲ್ಲಿಉಚಿತ ಚಿಕಿತ್ಸೆ

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಆರೋಗ್ಯಾಧಿಕಾರಿಗಳೊಂದಿಗಿನ ಸಭೆಯಲ್ಲಿ ಎಚ್1ಎನ್1ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳಲು ಆದೇಶಿಸಿದರು. ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಖರ್ಚನ್ನು ರಾಜ್ಯ ಸರಕಾರವೇ ಭರಿಸಲಿದೆ ಎಂಬ ವಿಶ್ವಾಸವನ್ನು ಯಡಿಯೂರಪ್ಪ ನೀಡಿದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡುತ್ತಾ, ಎಚ್1ಎನ್1 ತಡೆಗಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ. ಖಾಸಗಿ ಆಸ್ಪತ್ರೆಗಳ ಸಹಯೋಗದೊಂದಿಗೆ ಸೋಂಕನ್ನು ತಡೆಗಟ್ಟಲಾಗುತ್ತದೆ. ಆರ್ಥಿಕವಾಗಿ ದುರ್ಬಲವಾಗಿರುವ ರೋಗಿಗಳಿಗೆ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸಲಿದೆ ಎಂದರು.
ಶನಿವಾರ(ಆ.22) ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಬಿ ಶ್ರೀರಾಮುಲು, ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ, ಆರೋಗ್ಯ ಕಾರ್ಯದರ್ಶಿ ಪೆರುಮಾಳ್ ಸೇರಿದಂತೆ ಆರೋಗ್ಯಾಧಿಕಾರಿಗಳು ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸಿದ್ದರು.
ರಾಜ್ಯ ಸರಕಾರ ಎಚ್1ಎನ್1 ಸೋಂಕನ್ನು ತಡೆಗಟ್ಟಲು ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಆಜಾದ್ ಹೇಳಿದ್ದರು. ಅವರ ಮಾತಿನಲ್ಲಿ ಹುರುಳಿಲ್ಲ. ಕೇವಲ ರಾಜ್ಯದಲ್ಲಷ್ಟೇ ಅಲ್ಲ ಇಡೀ ದೇಶದಲ್ಲೇ ಸೋಂಕು ಹರಡಿದೆ. ಸೋಂಕನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಪ್ರತಿಕ್ರಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಎಚ್1ಎನ್1ಗೆ ಚಿಕಿತ್ಸೆ ಪಡೆಯಲು ಸರಿಸುಮಾರು ರು.10 ರಿಂದ 12 ಸಾವಿರ ಖರ್ಚಾಗುತ್ತದೆ. ಈ ವೆಚ್ಚವನ್ನು ಇನ್ನು ಮುಂದೆ ಸರಕಾರ ಭರಿಸಲಿದೆ. ಬೆಂಗಳೂರಿನಲ್ಲಿ ದಿನೇ ದಿನೇ ಎಚ್1ಎನ್1 ಸೋಂಕು ವೃದ್ಧಿಸುತ್ತಿದ್ದು ಇದುವರೆಗೂ ರಾಜ್ಯದಲ್ಲಿ ಒಟ್ಟು 12 ಮಂದಿಯನ್ನು ಬಲಿತೆಗೆದುಕೊಂಡಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications