ಸುಧಾಕರ್ ಗೆ ರಾಜೀನಾಮೆ ನೀಡಲು ಸಿಎಂ ಸೂಚನೆ
ಬೆಂಗಳೂರು, ಆ. 31 : ಸಮಾಜ ಕಲ್ಯಾಣ ಖಾತೆ ಸಚಿವ ಡಿ ಸುಧಾಕರ್ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಮುಜರಾಯಿ ಸಚಿವ ವಿ ಸೋಮಣ್ಣ ಅವರ ರಾಜೀನಾಮೆ ಪತ್ರ ಪಡೆದುಕೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಬ್ಯಾಂಕ್ ಗೆ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಅವರ ವಿರುದ್ಧ ಚಾರ್ಜ್ ಸೀಟ್ ಸಲ್ಲಿಸಿದೆ. ಅವರು ಆರೋಪ ಮುಕ್ತರಾಗುವ ತನಕ ಸಚಿವ ಸ್ಥಾನದಿಂದ ದೂರ ಇರುವುದು ಒಳಿತು ಎಂಬುದನ್ನು ಅವರಿಗೆ ತಿಳಿಸಿದ್ದೇನೆ. ಆರೋಪ ಮುಕ್ತರಾದ ನಂತರ ಮತ್ತೆ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಮುಜರಾಯಿ ಸಚಿವ ವಿ ಸೋಮಣ್ಣ ಅವರ ರಾಜೀನಾಮೆ ಪಡೆದ ನಂತರ ಪ್ರತಿಕ್ರಿಯೆ ನೀಡಿದ ಅವರು, ಉಪಚುನಾವಣೆ ಫಲಿತಾಂಶ ಬಂದ ನಂತರ ಸೋಮಣ್ಣ ಅವರ ನಿವಾಸಕ್ಕೆ ಭೇಟಿ ನೀಡಿದಾಗಲೇ ಅವರು ನನಗೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ, ನಾನು ಅಂದು ಅವರಿಗೆ ಅವಸರ ಮಾಡಬೇಡಿ ಎಂದು ಸಮಾಧಾನಪಡಿಸಿದ್ದೆ. ಆದರೆ, ಇಂದು ಅವರು ವಿಧಾನಸೌಧಕ್ಕೆ ಆಗಮಿಸಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪತ್ರವನ್ನು ಅಂಗೀಕರಿಸಲಾಗಿದೆ ಎಂದರು. ಸೋಮಣ್ಣ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)