ಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ
ಆರು ದಿನಗಳ ಚೀನಾ ಪ್ರವಾಸದ ನಂತರ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯಪಾಲರು ನೀಡಿರುವ ಹೇಳಿಕೆ ಇದೀಗ ಮುಗಿದಿರುವ ಅಧ್ಯಾಯ. ಮಾಧ್ಯಮಗಳಲ್ಲಿ ಬಂದಿರುವ ವರದಿಗೆ ತಲೆ ಕೆಡಿಸಿಕೊಳ್ಳಬೇಡಿ. ಸರಕಾರದ ಸಹಕಾರದೊಂದಿಗೆ ಕೆಲಸ ಮಾಡುವುದಾಗಿ ಸ್ವತಃ ರಾಜ್ಯಪಾಲರು ತಿಳಿಸಿದ್ದಾರೆ. ಗೃಹ ಸಚಿವ ವಿ ಎಸ್ ಆಚಾರ್ಯ ಅವರು ಈ ಬಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಯಡಿಯೂರಪ್ಪ ವಿವರಿಸಿದರು.
ಚೀನಾ ಪ್ರವಾಸದ ಬಗ್ಗೆ ಪ್ರತಿಪಕ್ಷಗಳು ತೀವ್ರವಾಗಿ ಟೀಕಿಸತೊಡಗಿವೆ. ಪ್ರಜಾಪ್ರಭುತ್ವದಲ್ಲಿ ಟೀಕೆಗಳು ಸಹಜ. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದೆ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಆಡಳಿತ ನಡೆಸುವುದಾಗಿ ಹೇಳಿದರು. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕುರಿತ ಚರ್ಚೆಗಾಗಿ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದೆ. ಇದನ್ನು ಬೇರೆ ರೀತಿ ಅರ್ಥೈಸಿಕೊಳ್ಳುವುದೇಕೆ ? ಹರಗಣಗಳ ಬಗ್ಗೆ ಚರ್ಚಿಸಲು ಅಧಿವೇಶನ ಕರೆಯುವುದಾಗಿ ಹೇಳಿದ್ದು ನಿಜ. ಈಗಲೂ ಕಾಲ ಮಿಂಚಿಲ್ಲ. ನಾಳೆ ವಿಧಾನಮಂಡಲ ವ್ಯವಹಾರಗಳ ಸಲಹಾ ಸಮಿತಿ ನಡೆಯಲಿದ್ದು, ಯಾವ ಯಾವ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕೆಂದು ಸಲಹೆಗಳನ್ನು ಸ್ಪೀಕರ್ ಮುಂದಿಡಲಿ ಎಂದು ಯಡಿಯೂರಪ್ಪ ಹೇಳಿದರು.
ವಿಷಯಗಳ ಚರ್ಚೆಗೆ ಮೂರು ದಿನ ಸಾಲದಿದ್ದರೆ ಸ್ಪೀಕರ್ ಸಲಹೆ ಮೇರೆಗೆ ಇನ್ನೂ ಹೆಚ್ಚು ಕಾಲ ಅಧಿವೇಶನ ನಡೆಸಲು ತಾವು ಸಿದ್ದ. ವರ್ಷದಲ್ಲಿ 60 ದಿನಗಳ ಕಾಲ ಅಧಿವೇಶನ ನಡೆಸಬೇಕೆಂಬ ವಿಷಯದಲ್ಲಿ ಎರಡು ಮಾತಿಲ್ಲ. ತಮ್ಮ ಅಧಿಕಾರಾವಧಿಯಲ್ಲಿ ಕಡ್ಡಾಯವಾಗಿ 60 ದಿನ ಅಧಿವೇಶನ ನಡೆಯಲಿದೆ. ಇದರಲ್ಲಿ ಯಾರಿಗೂ ಅನುಮಾನ ಬೇಡ ಎಂದು ಅವರು ಹೇಳಿದರು.
ಸುಧಾಕರ್ ರಾಜೀನಾಮೆಗೆ ಕ್ಷಣಗಣನೆ...
ರಾಷ್ಟ್ರೀಕೃತ ಬ್ಯಾಂಕೊಂದಕ್ಕೆ ವಂಚನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಿ ಸುಧಾಕರ್ ಅವರಿಗೆ ನೀಡಿದ್ದ ಅವಧಿ ಕೊನೆಗೊಂಡಿದ್ದು, ಇಂದು ರಾತ್ರಿ ವೇಳೆಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಚೀನಾದಿಂದ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸುಧಾಕರ್, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪತ್ರವನ್ನು ಈಗಾಗಲೇ ಮುಖ್ಯಮಂತ್ರಿಗಳ ಕೈಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ, ಆರೋಪಪಟ್ಟಿಯನ್ನು ವಜಾಗೊಳಿಸುವಂತೆ ಕೋರಿ ಸಚಿವ ಸುಧಾಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಒಂದು ವಾರಗಳ ಕಾಲ ವಿಚಾರಣೆ ಮುಂದೂಡಿದೆ. ಸಚಿವ ಸುಧಾಕರ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.
(ದಟ್ಸ್ ಕನ್ನಡ ವಾರ್ತೆ)