ದೆಹಲಿ ಶಾಲೆಯಲ್ಲಿ ಕಾಲ್ತುಳಿತ : 5 ಸಾವು
ಕಳೆದ ರಾತ್ರಿ ಬಿದ್ದ ಧಾರಕಾರ ಮಳೆಯಿಂದ ನಗರದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ತಗ್ಗು ಪ್ರದೇಶಗಳಲ್ಲಿ ನೀರಿನಿಂದ ಜಲಾವೃತವಾಗಿದ್ದು, ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುವಂತಾಗಿತ್ತು. ಈ ಸರಕಾರಿ ಶಾಲೆ ಕೂಡಾ ನೀರು ತುಂಬಿಕೊಂಡಿತ್ತು. ಇಂದು ಎಂದಿನಂತೆ ಶಾಲೆ ಆರಂಭಗೊಂಡಿದ್ದರಿಂದ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಆದರೆ, ಶಾರ್ಟ್ ಸರ್ಕ್ಯೂಟ್ ಆಗಿರುವ ವಿಷಯ ವಿದ್ಯಾರ್ಥಿಗಳಿಗೆ ತಿಳಿದಿದೆ. ಈ ಸಂದರ್ಭದಲ್ಲಿ ಭಯಗೊಂಡ ವಿದ್ಯಾರ್ಥಿಗಳು ಹೊರಗೆ ಓಡತೊಡಗಿದರು.
ಆಗ ಕಾಲ್ತುಳಿತ ಸಂಭವಿಸಿದ್ದು, 5 ವಿದ್ಯಾರ್ಥಿನಿಯರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. 30 ಹೆಚ್ಚು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ. 8 ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿ ಎಂದು ವೈದ್ಯರು ತಿಳಿಸಿದ್ದಾರೆ. ನಗರದ ಗುರು ತೇಗು ಬಹದ್ದೂರ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಪೋಷಕರು ಕಲ್ಲು ತೂರಾಟ ಆರಂಭಿಸಿದ್ದು, ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.
ಘಟನೆಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಶೀಲಾ ದಿಕ್ಷೀತ್, ಇದೊಂದು ವಿಷಾಧಕರ ಸಂಗತಿ ಎಂದಿದ್ದಾರೆ. ಮೃತ ವಿದ್ಯಾರ್ಥಿನಿಯರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಪರಿಹಾರವನ್ನೂ ಘೋಷಿಸಿದ್ದಾರೆ. ಸರಕಾರಿ ಶಾಲೆಗಳು ಪರಿಸ್ಥಿತಿ ಹೇಗಿರುತ್ತವೆ ಎನ್ನುವುದಕ್ಕೆ ಈ ಘಟನೆ ಸೂಕ್ತ ನಿದರ್ಶನ.
(ಏಜನ್ಸೀಸ್)