ನೆರೆ ಪರಿಹಾರ: ಸಿಎಂ ಪಾದಯಾತ್ರೆಗೆ ಭಾರಿ ಬೆಂಬಲ
ಬೆಂಗಳೂರು, ಅ. 7 : ಪ್ರವಾಹ ಪೀಡಿತರ ಪರಿಹಾರಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಪಾದಯಾತ್ರೆ ನಗರದ ಎಸ್ ಬಿಎಂ ಬ್ಯಾಂಕ್ ನಿಂದ ಆರಂಭಗೊಂಡಿದ್ದು, ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಅವಿನ್ಯೂ ಮತ್ತು ಬಿ ವಿ ಕೆ ಅಯ್ಯಂಗಾರ್ ರಸ್ತೆ, ಚಿಕ್ಕಪೇಟೆಯಲ್ಲಿ ಪಾದಯಾತ್ರೆ ನಡೆಸುತ್ತಿರುವ ಮುಖ್ಯಮಂತ್ರಿಗಳಿಗೆ ಅನೇಕ ಉದ್ಯಮಿದಾರರು ಪರಿಹಾರ ಧನ ನೀಡುತ್ತಿರುವ ಸಾಮಾನ್ಯವಾಗಿತ್ತು. ಕೆಪಿಟಿಸಿಎಲ್ ನಿಂದ 3 ಕೋಟಿ ರುಪಾಯಿ, ಮಾರವಾಡಿ ಸಮಾಜದಿಂದ 100 ಮನೆಗಳ ನಿರ್ಮಾಣ ಮಾಡುವ ವಾಗ್ದಾನ ನೀಡಿದೆ.
ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆ ಆರಂಭಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಭಾರಿ ಬೆಂಬಲ ವ್ಯಕ್ತವಾಯಿತು. ತಂಡೋಪತಂಡವಾಗಿ ಮನೆ ಮಠ ಕಳೆದುಕೊಂಡು ಸಂತ್ರಸ್ಥರಾಗಿರುವ ಮಂದಿಗೆ ಸಹಾಯಹಸ್ತ ಚಾಚುತ್ತಿರುವ ದೃಶ್ಯ ಸೂರಿಲ್ಲದವರಿಗೆ ಮುಖದಲ್ಲಿ ಆಶಾಭಾವನೆ ಮೂಡಿಸಿದೆ.
ಮುಖ್ಯಮಂತ್ರಿ ಜೊತೆಯಲ್ಲಿ ಸಂಸದ ಅನಂತಕುಮಾರ್, ಸಚಿವರಾದ ಶೋಭಾ ಕರಂದ್ಲಾಜೆ, ಕಟ್ಟಾ ಸುಬ್ರಮಣ್ಯ ನಾಯ್ಡು, ಬಸವರಾಜ ಬೊಮ್ಮಾಯಿ. ಚಿತ್ರನಟ ಶ್ರೀನಾಥ್, ಸೇರಿದಂತೆ ಅನೇಕ ಅಧಿಕಾರಿಗಳು ಪಾಲ್ಗೊಂಡಿದ್ದಾರೆ. ಮುಖ್ಯಮಂತ್ರಿಗಳ ಪಾದಯಾತ್ರೆಗೆ ಹಿನ್ನೆಲೆಯಲ್ಲಿ ಭಾರಿ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರು ಸ್ವತಃ ಬಂದೋಬಸ್ತ್ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.
ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನೆರ ಸಂತ್ರಸ್ಥರ ನೆರವಿಗೆ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ದೊರೆತಿದೆ. ಮಳೆಯಿಂದಾಗಿ ಸುಮಾರು 3 ಲಕ್ಷ ಮಂದಿ ಮನೆ ಕಳೆದುಕೊಂಡಿದ್ದಾರೆ. ಅವರಿಗೆ ಮನೆ ಕಟ್ಟಿಕೊಡುವುದು ಸರಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಸರಕಾರ ಹೆಜ್ಜೆ ಇರಿಸಿದ್ದು, ಈಗಾಗಲೇ ಸಾರ್ವಜನಿಕರಿಂದ 250 ಕೋಟಿ ರುಪಾಯಿ ಸಂಗ್ರಹಿಸಲಾಗಿದೆ ಎಂದು ಹೇಳಿದರು. 1000 ಕೋಟಿ ರುಪಾಯಿ ಹಣ ಸಂಗ್ರಹ ಗುರಿ ಹೊಂದಲಾಗಿದೆ. ಬೆಂಗಳೂರು ಸೇರಿ ಇತರೆ ನಗರಗಳಲ್ಲಿ ಪಾದಯಾತ್ರೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ಸಂತ್ರಸ್ತರಿಗೆ ಧನಸಹಾಯ ಮಾಡಬಯಸುವವರು ದೇಣಿಗೆ ನೀಡಿ:
Remit 'Calamity Relief Fund of Karnataka'
A/C number : 8235-00-111-0-02
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications