ಹಿರಿಯ ನಾಗರಿಕರಿಗೆ ಸರಕಾರದ "ಆಸರೆ"
ಧಾರವಾಡ, ಅ. 28 : ಗ್ರಾಮಗಳಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರು ಮತ್ತು ಒಂಟಿ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ "ಆಸರೆ" ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ ಪ್ರಕಾಶ್ ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ ಪರಿಣಾಮಕಾರಿಯಾಗಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದರು. ಇಲಾಖೆಯಲ್ಲಿ ಈ ಬಗ್ಗೆ ಸಂಪೂರ್ಣ ವಿವರವನ್ನು ಹೊಂದಲಾಗುತ್ತಿದೆ. ಪ್ರತಿ ವಾರವೂ ಇಂತಹ ವ್ಯಕ್ತಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಾಗುವುದು ಎಂದು ಪ್ರಕಾಶ್ ಹೇಳಿದರು.
ಮೊದಲು ಜಿಲ್ಲೆಯ ಗ್ರಾಮಗಳಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರು ಮತ್ತು ಒಂಟಿ ಮಹಿಳೆಯರ ಕುರಿತು ಸರ್ವೆ ನಡೆಸಲಾಗುವುದು. ಯೋಜನೆ ಬಗ್ಗೆ ತಿಳುವಳಿಕೆ ನೀಡಲು ತಂಡ ರಚಿಸಿ ಅಗತ್ಯ ಮಾಹಿತಿ ನೀಡಲಾಗುವುದು. ಯೋಜನೆ ಪರಿಣಾಮಕಾರಿ ಜಾರಿಗೆ ತರಲು ಸರಕಾರೇತರ ಸಂಸ್ಥೆಗಳೊಂದಿಗೆ ಕಾರ್ಯನಿರ್ವಹಿಸಲು ಚಿಂತನೆ ನಡೆಸಲಾಗಿದೆ ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)