ಎಂಎಲ್ಸಿ ಚುನಾವಣೆಗೆ ಬಿಜೆಪಿ ರಣತಂತ್ರ
ಡಿಸೆಂಬರ್ 18 ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಗೆಲುವು ಅನಿವಾರ್ಯವಾಗಿದ್ದು, ಶತಾಯ-ಗತಾಯ ಗೆಲ್ಲಲೇಬೇಕೆಂದು ಹಠ ತೊಟ್ಟಿರುವ ಬಿಜೆಪಿ ಮುಖಂಡರು ಗೆಲ್ಲುವ ಅಭ್ಯರ್ಥಿಗಳ ಹುಡುಕಾಟ ಆರಂಭಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭೆ, ಉಪಚುನಾವಣೆಗಳಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿ ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲುವು ಸಾಧಿಸಬೇಕಿದೆ.
ಇತ್ತೀಚೆಗೆ ಬಿಜೆಪಿ ಬಿಕ್ಕಟ್ಟು ಶಮನಗೊಂಡಿದ್ದು, ಬುಧವಾರದಿಂದ ಬಿಜೆಪಿ ನಾಯಕರು ಸಭೆ ಸೇರಿ ಗೆಲ್ಲುವು ಕುದುರೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು. ಪರಿಷತ್ ನ 25 ಸ್ಥಾನಗಳಲ್ಲಿ ಹೆಚ್ಚಿನ ಸ್ಥಾನಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ವಿಧಾನ ಪರಿಷತ್ ಅಭ್ಯರ್ಥಿಗಳ ಅಯ್ಕೆ ಪ್ರಕ್ರಿಯೆ ಇದೇ 21 ರಂದು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಸಂಬಂಧ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಈ ತಿಂಗಳ 21 ರೊಳಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸಿಕೊಡುವಂತೆ ಸೂಚನೆ ನೀಡಲಾಗಿದೆ ಎಂದರು. ಜಿಲ್ಲಾ ಘಟಕಗಳಿಂದ ಪಟ್ಟಿ ಬಂದ ನಂತರ ಚುನಾವಣೆ ಸಮಿತಿ ಸೇರಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಯಡಿಯೂರಪ್ಪ ವಿವರಿಸಿದರು.
ಚುನಾವಣೆ ವಿವರ : ನ.24 ರಂದು ನಾಮಪತ್ರ ಸಲ್ಲಿಕೆ ಆರಂಭ. ಡಿ.1 ನಾಮಪತ್ರ ಸಲ್ಲಿಕೆ ಅಂತಿಮ ದಿನ. ಡಿ 2 ರಂದು ನಾಮಪತ್ರಗಳ ಪರಿಶೀಲನೆ. ಡಿ ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನ. ಡಿ. 18 ರಂದು ಮತದಾನ. ಡಿ 21 ರಂದು ಫಲಿತಾಂಶ.
(ದಟ್ಸ್ ಕನ್ನಡ ವಾರ್ತೆ)