ಗಣಿಗಾರಿಕೆ : ಸಿಬಿಐ ತನಿಖೆಗೆ ಸಿಎಂ ನಕಾರ
ಸುರಪುರ ತಾಲ್ಲೂಕಿನ ತಿಂಥಿಣಿ ಗ್ರಾಮದಲ್ಲಿ ಸಂತ್ರಸ್ತರ ಪುನರ್ವಸತಿ ಯೋಜನೆ ಆಸರೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ವಹಿಸುವ ಪ್ರಶ್ನೆಯೇ ಇಲ್ಲ. ಅನಗತ್ಯ ತನಿಖೆಗೆ ಸರಕಾರ ಮುಂದಾಗುವುದಿಲ್ಲ ಎಂದರು.
ಸಂತ್ರಸ್ತರ ಪುನರ್ವಸತಿ ನಿರ್ಮಾಣ ಮತ್ತಷ್ಟು ಚುರುಕಾಗಲಿದೆ. ಈ ಬಗ್ಗೆ ಆಯಾ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ನೀಡಲಾಗಿದ್ದು, ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದಲ್ಲಿ ನಿರ್ಲಕ್ಷ್ಯ ಮಾಡಿದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಬಿಜೆಪಿಯಲ್ಲಿನ ಬಿಕ್ಕಟ್ಟು ಪರಿಹಾರವಾದ ನಂತರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳು ನೈಸರ್ಗಿಕ ಸಂಪತ್ತು ಲೂಟಿಯಾಗುತ್ತಿದೆ. ಕೆಲವರ ಹಿಡಿದಲ್ಲಿರುವ ಗಣಿ ಸಂಪತ್ತನ್ನು ರಕ್ಷಣೆ ಮಾಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಅಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ನಾವಿದ್ದೇವೆ ಎಂಬ ಅಸಹಾಯಕತೆಯನ್ನು ತೋಡಿಕೊಂಡಿದ್ದರು.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿರುವ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮಗಳನ್ನು ಎಸಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದೆ. ಆಂಧ್ರಪ್ರದೇಶ ಸರಕಾರ ಓಎಂಸಿ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ವಹಿಸಿದ್ದರಿಂದ ರಾಜ್ಯದಲ್ಲಿ ಗಣಿಗಾರಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಪ್ರತಿಪಕ್ಷಗಳು ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದವು.
(ದಟ್ಸ್ ಕನ್ನಡ ವಾರ್ತೆ)