ಆದಾಯ ತೆರಿಗೆ ವಂಚನೆ ಸುಳಿಯಲ್ಲಿ ಚಕ್ರಪಾಣಿ
ಬಳ್ಳಾರಿ ರಸ್ತೆಯಲ್ಲಿರುವ ಕೋಡಿಗೆಹಳ್ಳಿ ನಿವಾಸಿ ಕಾಂಗ್ರೆಸ್ ನಾಯಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಚಕ್ರಪಾಣಿ, ಜಯಮಹಲ್ ನಲ್ಲಿರುವ ರಿಯಲ್ ಎಸ್ಟೇಟ್ ಉದ್ಯಮಿ ಕಮಲ್ ಪಾಷಾ, ನಗರದ ಪ್ರತಿಷ್ಠಿತ ಹೋಟೆಲ್ ಗೋಲ್ಡ್ ಫಿಂಚ್ ಮಾಲೀಕ ಪ್ರಕಾಶ್ ಶೆಟ್ಟಿ ಮತ್ತು ನಂದಿನಿ ಹೋಟೆಲ್ ಮಾಲೀಕ ಆನಂದ ರೆಡ್ಡಿ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಸಂಜೆ ವೇಳೆಗೆ ಈ ಎಲ್ಲ ಮಾಹಿತಿ ಲಭ್ಯವಾಗಲಿವೆ.
ದಾಳಿ ಕುರಿತು ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಚಕ್ರಪಾಣಿ, ಆದಾಯ ತೆರಿಗೆ ವಂಚನೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ. ನಾವು ಕಾಲ ಕಾಲಕ್ಕೆ ತೆರಿಗೆ ಕಟ್ಟುತ್ತಾ ಬಂದಿದ್ದೇವೆ. ಆದರೆ, ಯಾವ ಕಾರಣಕ್ಕೆ ದಾಳಿ ನಡೆದಿದೆ ಎನ್ನುವುದು ಗೊತ್ತಿಲ್ಲ. ತೆರಿಗೆ ಕಟ್ಟಿರುವ ಅಷ್ಟೂ ದಾಖಲೆಗಳು ನಮ್ಮ ಬಳಿ ಇವೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿತ್ತು. ಈ ಬಗ್ಗೆ ದಾಳಿಗೊಳಗಾದ ವ್ಯಕ್ತಿಗಳು ಆದಾಯ ತೆರಿಗೆ ಇಲಾಖೆಗೆ ಸೂಕ್ತವಾಗಿ ಸ್ಪಂದಿಸಿರಲಿಲ್ಲ ಎಂದು ತಿಳಿದುಬಂದಿದೆ.
(ದಟ್ಸ್ ಕನ್ನಡ ವಾರ್ತೆ)