ಕಾಂಗ್ರೆಸ್ ಜೊತೆ ಮೈತ್ರಿಗೆ ಸಿದ್ಧ : ಕುಮಾರಸ್ವಾಮಿ
ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ತಯಾರಿದೆ. ಹಣಬಲ, ತೋಳ್ಬಲದಿಂದ ಮೆರೆಯುತ್ತಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಲು ಇದು ಸಕಾಲ. ಬಿಜೆಪಿ ಸೋಲಿಸುವುದು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಏಕೈಕ ಗುರಿಯಾಗಿದೆ. ಹೀಗಾಗಿ ಈ ಬಗ್ಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಮ್ಮ ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಸ್ಪಷ್ಟಪಡಿಸಿದರು.
20 ಜಿಲ್ಲೆಗಳಿಂದ 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 18ರಂದು ಚುನಾವಣೆ ನಡೆಯಲಿದೆ. ಒಂದೊಂದು ಜಿಲ್ಲೆಗಳಲ್ಲಿ 2 ಸ್ಥಾನಗಳು ಇದ್ದಲ್ಲಿ, ಒಂದು ಸ್ಥಾನ ಜೆಡಿಎಸ್ ಗೆ ಮತ್ತು ಇನ್ನೊಂದು ಸ್ಥಾನ ಕಾಂಗ್ರೆಸ್ ಪಕ್ಷಕ್ಕೆ ಎಂದು ಒಪ್ಪಂದ ಮಾಡಿಕೊಳ್ಳಬಹುದು. ಜೊತೆಗೆ ಆಯಾ ಪಕ್ಷಗಳ ವರ್ಚಸ್ಸು, ಬಿಜೆಪಿ ಅಭ್ಯರ್ಥಿಯನ್ನು ಪರಿಗಣಿಸಿ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಬಹುದು ಎನ್ನುವ ಲೆಕ್ಕಾಚಾರದಲ್ಲಿ ಕುಮಾರಸ್ವಾಮಿ ಇದ್ದಾರೆ. ಆದರೆ, ಜೆಡಿಎಸ್ ನ ತಂತ್ರಗಾರಿಕೆಗೆ ಕಾಂಗ್ರೆಸ್ ಕಡೆಯಿಂದ ಯಾವ ಪ್ರತ್ಯುತ್ತರವೂ ಈವರೆಗೆ ಬಂದಿಲ್ಲ.
(ದಟ್ಸ್ ಕನ್ನಡ ವಾರ್ತೆ)